ಮಂಗಳೂರಿನಲ್ಲಿ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಆದರೆ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಯಾವುದೇ ಬಾಂಬ್ಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ದಕ್ಷಿಣ ಪೊಲೀಸ್ ಠಾಣೆಯ ವ್ಯಾಪ್ತಿಯ ಅತ್ತಾವರದ ಮಣಿಪಾಲ್ ಸ್ಕೂಲ್, ಮಂಗಳೂರು ಗ್ರಾಮಾಂತರ ಠಾಣೆಯ ವ್ಯಾಪ್ತಿಯ ನೀರುಮಾರ್ಗದ ಪ್ರೆಸಿಡೆನ್ಸಿ ಸ್ಕೂಲ್ ಮತ್ತು ಪಿ.ಯು. ಕಾಲೇಜು ಮತ್ತು ಕೇಂಬ್ರಿಜ್ ಸ್ಕೂಲ್ಗಳ ಪ್ರಾಂಗಣದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಬಂದಿತ್ತು. ತಕ್ಷಣವೇ ಈ ಶಾಲೆಗಳಿಗೆ ಪೊಲೀಸರ ತಂಡಗಳನ್ನು ಕಳುಹಿಸಿ ಪರಿಶೀಲಿಸಲಾಗಿತ್ತು. ಅಲ್ಲದೇ ವಿಧ್ವಂಸಕ ಕೃತ್ಯ ತಡೆ ತಂಡ ಹಾಗೂ ಬಾಂಬ್ ನಿಷ್ಕ್ರಿಯ ದಳಗಳನ್ನು ಕಳುಹಿಸಿ ತಪಾಸಣೆಗೆ ಒಳಪಡಿಸಲಾಗಿದೆ. ವಿಧ್ವಂಸಕ ಕೃತ್ಯಕ್ಕೆ ಕಾರಣವಾಗುವ ಯಾವುದೇ ಸಾಮಗ್ರಿಗಳು ಈ ಶಾಲೆಗಳ ಪ್ರಾಂಗಣದಲ್ಲಿ ಕಂಡು ಬಂದಿಲ್ಲ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.