ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆ ನಿರ್ಮಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತೀರ್ಮಾನಿಸಿದೆ.
ಇನ್ನು ಹದಿನಾಲ್ಕು ತಿಂಗಳಲ್ಲಿ ಭುವನೇಶ್ವರಿ ಪ್ರತಿಮೆಗೆ ಅಂತಿಮ ಸ್ಪರ್ಶ ದೊರಕಲಿದ್ದು, ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ಆವರಣದಲ್ಲಿ ಸುಮಾರು 25 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.
ಸ್ಥಳದಲ್ಲಿ ಪ್ರವಾಸಿಗರನ್ನು ಸೆಳೆಯುವಂತಹ ನಿಟ್ಟಿನಲ್ಲಿ ಉದ್ಯಾನವನ ನಿರ್ಮಾಣ ಹಾಗೂ ವಿಗ್ರಹದೊಂದಿಗೆ ಕನ್ನಡ ನಾಡಿನ ಸಾಂಸ್ಕೃತಿಕ ವೈಭವ, ಗತಕಾಲದ ಹೆಮ್ಮೆಯ ವಿಷಯಗಳನ್ನು ಪ್ರತಿಬಿಂಬಿಸುವ ಚಿತ್ರಣ ಇರಲಿವೆ.
2024ರ ನವೆಂಬರ್ 1ಕ್ಕೆ ಪ್ರತಿಮೆ ಅನಾವರಣಗೊಳಿಸುವ ಸಂಬಂಧ ಅಧಿಕಾರಿಗಳು ಮತ್ತು ಶಿಲ್ಪಿಗಳೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸಭೆ ನಡೆಸಿದ್ದಾರೆ.ವಿ. ಸುನೀಲ್ ಕುಮಾರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಅವಧಿಯಲ್ಲಿ ಭುವನೇಶ್ವರಿ ಪ್ರತಿಮೆ ನಿರ್ಮಾಣಕ್ಕೆ ಸೂಚನೆ ನೀಡಿದ್ದರು.
ಕಲಾವಿದ ಕೆ. ಸೋಮಶೇಖರ್ ಸಿದ್ಧಪಡಿಸಿರುವ ನಾಡದೇವಿಯ ಚಿತ್ರವನ್ನು ಅಧಿಕೃತಗೊಳಿಸುವಂತೆ ಲಲಿತ ಕಲಾ ಅಕಾಡೆಮಿ ಅಧ್ಯಕ್ಷ ಡಿ. ಮಹೇಂದ್ರ ಅಧ್ಯಕ್ಷತೆಯ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಅದೇ ಮಾದರಿಯ ನಾಡದೇವಿಯ 25 ಅಡಿಯ ಪ್ರತಿಮೆ ತಲೆ ಎತ್ತಲಿದೆ.
ಕಂಚಿನ ಬೃಹತ್ ವಿಗ್ರಹ ನಿರ್ಮಾಣ ಕಾಮಗಾರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಮುಂದಿನ ವರ್ಷ ನವೆಂಬರ್ 1ಕ್ಕೆ ಮುಖ್ಯಮಂತ್ರಿಗಳಿಂದಲೇ ಪ್ರತಿಮೆ ಅನಾವರಣ ಮಾಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿಂತಿಸಿದೆ.