
ಉಡುಪಿಯ ಮಣಿಪಾಲ ಈಶ್ವರನಗರದಲ್ಲಿರುವ ಜನನಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಸಮೀಪ ಯುವಕರ ಮೇಲೆ ಭೀಕರ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಶಿವಮೊಗ್ಗ ಮೂಲದ ಅಕ್ಷಯ್ ಎ. (21), ಪುನೀತ್ ಎಸ್. (21), ಶಮಂತ್ ಕೆ.ಆರ್. (21) ಹಾಗೂ ಯಶವಂತ್ ಬಿ.ಜೆ. (21) ಎಂದು ಗುರುತಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.
ಆಗಸ್ಟ್ 2ರ ರಾತ್ರಿ ಹೆರ್ಗ ಗ್ರಾಮದ ಈಶ್ವರನಗರದ ರಸ್ತೆಯಲ್ಲಿ ಯಶ್ರಾಜ್ ಅವರು ತಮ್ಮ ಸಹೋದರ ಪವನ್ ಕುಮಾರ್ ಹಾಗೂ ಸ್ನೇಹಿತ ಶ್ರೇಯಸ್ ಜೊತೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಎರಡು ಕಾರುಗಳಲ್ಲಿ ಬಂದ ಆರೋಪಿಗಳು ಪವನ್ ಕುಮಾರ್ ಅವರನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಳಿಕ ಕೈ ಮತ್ತು ಕಾಲುಗಳಿಂದ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಲ್ಲದೆ, ಮೆಟಲ್ ಪಂಚ್ನಿಂದ ಮುಖಕ್ಕೆ ಗುದ್ದಿ ಮೂಗಿಗೆ ಗಂಭೀರ ಗಾಯಗೊಳಿಸಿದ್ದಾರೆ.
ಇದೇ ವೇಳೆ ತಡೆಯಲು ಬಂದ ಯಶ್ರಾಜ್ ಹಾಗೂ ಶ್ರೇಯಸ್ ಮೇಲೆಯೂ ಆರೋಪಿಗಳು ಹಲ್ಲೆ ನಡೆಸಿ, ಅವರ ಬಟ್ಟೆಗಳನ್ನು ಹರಿದು ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಸುದೀರ್ಘ ತನಿಖೆಯ ವೇಳೆ ಬಂಧಿತರೆಲ್ಲರೂ ನಿಟ್ಟೆಯ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂಬುದು ದೃಢಪಟ್ಟಿದೆ.


