ಚಾಮರಾಜನಗರ: ಮಂಗಳೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸೇರಿದ ನೆಲ್ಲಿಕಾಯಿ ರಸ್ತೆಯಲ್ಲಿನ 1.45 ಎಕರೆ ಜಾಗದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪನೆಗೆ ಕಾಮಗಾರಿ ಕೈಗೊಳ್ಳಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಕಾಮಗಾರಿಯನ್ನು 38.53 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಿತಿಯ ಸ್ವಂತ ನಿಧಿಯಿಂದ ಕೈಗೊಳ್ಳಲು ಸಚಿವ ಸಂಪುಟ ನಿರ್ಣಯಿಸಿದೆ.
ಇದೇ ವೇಳೆ, ಉಳ್ಳಾಲ ತಾಲೂಕಿನ ಪಾವೂರು ಗ್ರಾಮದ ದೋಟದಿಂದ ಬೋಳಿಯಾರು ಗ್ರಾಮದ ಜಳಕದ ಕಟ್ಟೆಯವರೆಗೆ ನೇತ್ರಾವತಿ ಎಡದಂಡೆ ಸಂರಕ್ಷಣೆ ಕಾಮಗಾರಿಯನ್ನು 40 ಕೋಟಿ ರೂಪಾಯಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಇನ್ನು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಸೌಲಭ್ಯಗಳ ಕಾಮಗಾರಿಯ ಅಂದಾಜು ಮೊತ್ತ 11,38,84,148 ರೂಪಾಯಿಗಳಿಗೆ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.