ಮಂಗಳೂರು: ಸಾರ್ವಜನಿಕರ ನಿರಂತರ ಆಗ್ರಹದ ಬಳಿಕ ಇದೀಗ ರಾಜ್ಯ ಸರಕಾರ ವಾರಂತ್ಯ ಕರ್ಫ್ಯೂ ರದ್ದುಗೊಳಿಸಿದ್ದು, ದ.ಕ. ಜಿಲ್ಲೆಯಲ್ಲಿದ್ದ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಆದರೆ ಪ್ರತಿದಿನ ರಾತ್ರಿ ಕರ್ಫ್ಯೂ ಮುಂದುವರಿಸಲಾಗಿದ್ದು,ಈ ಕುರಿತು ದ.ಕ. ಜಿಲ್ಲಾಡಳಿತ ಗುರುವಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಎರಡು ತಿಂಗಳಿಂದ ವಾರಾಂತ್ಯ ಕರ್ಫ್ಯೂವನ್ನು ಕೋವಿಡ್ ಎರಡನೇ ಅಲೆ ನಿಯಂತ್ರಣ ಸಲುವಾಗಿ ಹೇರಲಾಗಿತ್ತು. ಬೆಳಗ್ಗೆ 5ರಿಂದ ಮಧ್ಯಾಹ್ನ 2 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು, ಪ್ರತಿದಿನ ರಾತ್ರಿ 9ರಿಂದ ಮರುದಿನ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ವಿಧಿಸಲಾಗಿತ್ತು. ಇದೀಗ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಕೂಡ ಶೇ.2ಕ್ಕಿಂತ ಇಳಿಮುಖವಾಗಿದೆ. ಈ ಕಾರಣಕ್ಕೆ ಜಿಲ್ಲೆಯಲ್ಲೂ ವಾರಾಂತ್ಯ ಕರ್ಫ್ಯೂ ರದ್ದುಪಡಿಸಲಾಗಿದೆ.
ಇನ್ನು ನೈಟ್ ಕರ್ಫ್ಯೂ ದ.ಕ. ಜಿಲ್ಲೆಯಲ್ಲಿ ಮುಂದುವರೆದಿದ್ದು, ಪ್ರತೀ ದಿನ ರಾತ್ರಿ 9 ರಿಂದ ಮುಂಜಾನೆ 5ರ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಅಂಗಡಿ ಮುಂಗಟ್ಟುಗಳು ಬೆಳಗ್ಗೆ 5ರಿಂದ ರಾತ್ರಿ 9ರವರೆಗೆ ಕೋವಿಡ್ ನಿಯಮ ಪಾಲಿಸಿ ಕಾರ್ಯಾಚರಿಸಬಹುದು. ಅಂಗಡಿಗಳ ಮಾಲಕರು, ಸಿಬ್ಬಂದಿ ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ತೆಗೆದುಕೊಳ್ಳಬೇಕು. ಎಲ್ಲ ಅಂಗಡಿ ಮಾಲಕರು, ಸಿಬ್ಬಂದಿ ಪ್ರತಿ 10 ದಿನಕ್ಕೊಮ್ಮೆ ಕೋವಿಡ್ ಪರೀಕ್ಷೆ ನಡೆಸಿ ಆರ್ಟಿಪಿಸಿಆರ್ ನೆಗೆಟಿವ್ ವರದಿಯನ್ನು ಅಧಿಕಾರಿಗಳು ಭೇಟಿ ನೀಡಿದಾಗ ಹಾಜರುಪಡಿಸುವುದು ಕಡ್ಡಾಯಗೊಳಿಸಲಾಗಿದೆ.
ಆರೋಗ್ಯಾಧಿಕಾರಿಗಳು, ಸ್ಥಳೀಯ ಆಡಳಿತಗಳು ಕೋವಿಡ್ ತಪಾಸಣೆಗೆ ಭೇಟಿ ನೀಡಿದ ಸಂದರ್ಭ ಅವರೊಂದಿಗೆ ಸಹಕರಿಸಬೇಕು. ದ.ಕ.ಜಿಲ್ಲೆಯ ಗಡಿ ಭಾಗದಲ್ಲಿ ಈಗಾಗಲೇ ವಿಧಿಸಲಾಗಿರುವ ನಿರ್ಬಂಧಗಳು, ಮಾರ್ಗಸೂಚಿಗಳು ಯಥಾವತ್ ಮುಂದುವರಿಯುವುದು. ಸಾರ್ವಜನಿಕರು ಕೋವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸುವುದು.
ಈ ಆದೇಶ ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51ರಿಂದ 60ರನ್ವಯ, ಐಪಿಸಿ ಕಲಂ 188ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಕಲಂ 4,5 ಮತ್ತು 10ರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶದಲ್ಲಿ ತಿಳಿಸಿದ್ದಾರೆ.