ಉಡುಪಿ: ಇಲ್ಲಿನ ಕೆಲವು ಪ್ರದೇಶಗಳ ತೋಟಗಳಲ್ಲಿ ಹಾಗೂ ಕಾಡಂಚಿನ ಪ್ರದೇಶದಲ್ಲಿ ಗಾಂಜಾ ಬೆಳೆಯುವ ಸಾಧ್ಯತೆಯಿದೆ, ಈ ಬಗ್ಗೆ ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು.
ಅವರು ಡಿಸಿ ಕಚೇರಿ ಸಭಾಂಗಣ ದಲ್ಲಿ ಮಂಗಳವಾರದಂದು ಹಮ್ಮಿಕೊಂಡಿದ್ದ ಎನ್ಸಿಒಆರ್ಡಿ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ 97ಕ್ಕೂ ಹೆಚ್ಚು ಮಾದಕ ಸೇವನೆಗಳ ಪ್ರಕರಣ ದಾಖಲಾಗಿದ್ದು, ಶೇ. 90ರಷ್ಟು ಪ್ರಕರಣಗಳು ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಆಗಿದೆ. ಈ ಬಗ್ಗೆ ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಯ ಸಿಬ್ಬಂದಿ ನಿರಂತರ ವೀಕ್ಷಣೆ ನಡೆಸುತ್ತಿರಬೇಕು ಎಂದರು.
ಅಷ್ಟೇ ಅಲ್ಲದೆ ಮಾದಕ ವಸ್ತುಗಳ ಬಗ್ಗೆ ಶಾಲಾ- ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಬೇಕು. ಮಾದಕ ವಸ್ತುಗಳ ಬಗ್ಗೆ ಕರಾವಳಿ ಪೊಲೀಸರು ನಿಗವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಎಸ್ಪಿ ಪಿ.ಎ. ಹೆಗಡೆ, ಡಿಎಫ್ಒ ಗಣಪತಿ, ಡಿಎಚ್ಒ ಡಾ| ಐ.ಪಿ. ಗಡಾದ್, ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ., ಡಿಡಿಪಿಐ ಗಣಪತಿ, ಡಿಡಿಪಿಯು ಮಾರುತಿ, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.