ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸುಗಳಿಗೆ ಜೂನ್ 16 ಮತ್ತು 17ರಂದು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮತ್ತು 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.
ಈ ಬಾರಿ ಒಟ್ಟು 2,16,525 ವಿದ್ಯಾರ್ಥಿಗಳು ಸಿಇಟಿ ಬರೆಯಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಸಿಇಟಿ ವಿವರಗಳನ್ನು ಪ್ರಕಟಿಸಿದ ಅವರು, 16ರಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ ಪರೀಕ್ಷೆಗಳು ನಡೆಯಲಿವೆ. 17ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ಜರುಗಲಿದೆ ಎಂದು ತಿಳಿಸಿದ್ದಾರೆ.
ಜೂನ್ 18ರ ಬೆಳಿಗ್ಗೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಬೆಂಗಳೂರು, ಬೀದರ್, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರುಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದ್ದು, ಈ ಸಲ 1,708 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಈ ಬಾರಿ ಒಟ್ಟು 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಪೈಕಿ 87 ಕೇಂದ್ರಗಳು ಬೆಂಗಳೂರಿನಲ್ಲಿವೆ. ಯಾವುದೇ ಅಕ್ರಮಕ್ಕೆ ಅವಕಾಶ ನೀಡಬಾರದೆಂಬ ಉದ್ದೇಶದಿಂದ ಈ ಬಾರಿ ಪ್ರತಿಯೊಂದು ಕೇಂದ್ರದ ಪರೀಕ್ಷಾ ಪ್ರಕ್ರಿಯೆಯನ್ನೂ ಸಮಗ್ರವಾಗಿ ವಿಡಿಯೋ ಚಿತ್ರೀಕರಣ ಮಾಡಲಾಗುವುದು. ಜತೆಗೆ ಪ್ರಶ್ನೆಪತ್ರಿಕೆ ಪೂರೈಕೆ ಇತ್ಯಾದಿಗಳನ್ನು ಹದ್ದಿನ ಕಣ್ಣಿನ ಪಹರೆಯಲ್ಲಿ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರು ತಿಳಿಸಿದ್ದಾರೆ. ಈ ಸಲದ ಸಿಇಟಿ ಪರೀಕ್ಷೆಯಲ್ಲಿ ಪ್ರಶ್ನೆ ಮತ್ತು ಉತ್ತರಗಳನ್ನು ಇಂಗ್ಲಿಷ್ ಹಾಗೂ ಕನ್ನಡ ಎರಡರಲ್ಲೂ ಕೊಡಲಾಗುವುದು ಎಂದೂ ಅವರು ಮಾಹಿತಿ ನೀಡಿದರು.
ಪ್ರತಿಯೊಂದು ಕೇಂದ್ರಕ್ಕೂ ಸಹಾಯಕ ಆಯುಕ್ತರ ದರ್ಜೆಯ ಅಧಿಕಾರಿಯೊಬ್ಬರನ್ನು ಪರೀಕ್ಷಾ ವೀಕ್ಷಕರಾಗಿ ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಒಟ್ಟಾರೆ, 486 ವೀಕ್ಷಕರು, 972 ವಿಶೇಷ ತಪಾಸಣಾ ದಳದ ಸದಸ್ಯರು, 486 ಪ್ರಶ್ನೆಪತ್ರಿಕೆ ಪಾಲಕರು, 9,600 ಕೊಠಡಿ ಮೇಲ್ವಿಚಾರಕರು ಮತ್ತು 20 ಸಾವಿರಕ್ಕೂ ಹೆಚ್ಚು ಅಧಿಕಾರಿಗಳನ್ನು ಸಿಇಟಿ ಪರೀಕ್ಷಾ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಡಾ. ಅಶ್ವಥ್ ನಾರಾಯಣ ವಿವರಿಸಿದರು.