ಕುಂದಾಪುರ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಿಂದೂ ಕಾರ್ಯಕರ್ತೆ ಚೈತ್ರಾ ಉದ್ಯಮಿಯೊಬ್ಬರಿಗೆ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿಗೆ ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ಅರ್ಜಿ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಹಾಲಶ್ರೀ ಸ್ವಾಮೀಜಿ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಆದರೆ ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ್ದ 57ನೆ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಆದೇಶವನ್ನು ಅ.16ಕ್ಕೆ ಪ್ರಕಟಿಸುವುದಾಗಿ ಆದೇಶ ನೀಡಿತ್ತು. ಅದರಂತೆ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಸೋಮವಾರ (ಅ.16) 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಟಿ. ಗೋವಿಂದಯ್ಯ ಪ್ರಕಟಿಸಿದ್ದಾರೆ.
ಘಟನೆಯ ಹಿನ್ನೆಲೆ: ಬಿಜೆಪಿ ಟಿಕೆಟ್ ಪ್ರಕರಣದಲ್ಲಿ 1.50 ಕೋಟಿ ರೂ. ಪಡೆದ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು 2023ರ ಸೆಪ್ಟೆಂಬರ್ 19 ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್ನಲ್ಲಿ ಬಂಧಿಸಿದ್ದರು. ಇನ್ನು ಸಿಸಿಬಿ ಪೊಲೀಸರು ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಮತ್ತು ಅವರ ತಂಡದಿಂದ ಶೇ. 80 ರಷ್ಟು ಹಣ ಜಪ್ತಿ ಮಾಡಿ ಹಿಂಪಡೆದಿದ್ದಾರೆ. ಇದೇ ಮೊದಲ ಬಾರಿಗೆ ವಂಚನೆ ಪ್ರಕರಣವೊಂದರಲ್ಲಿ ಸಿಸಿಬಿ ಪೊಲೀಸರು ಶೇ 80 ರಷ್ಟು ಹಣವನ್ನು ರಿಕವರಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.