ಬೆಳ್ತಂಗಡಿ: ತೆಕ್ಕಾರಿನ ಕಂಟ್ರಿ ಬ್ಯಾರಿಗಳು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಾಕಿದ ಟ್ಯೂಬ್ ಲೈಟನ್ನು ಒಡೆದು ಹಾಕುತ್ತಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ಊರಿನ ಮುಸ್ಲಿಮರ ವಿರುದ್ದ ಅವಹೇಳನಕಾರಿ ಮತ್ತು ಕೋಮು ಪ್ರಚೋದನ ಕಾರಿಯಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿದ ಪ್ರಕರಣದಲ್ಲಿ ಇದೀಗ ಉಪ್ಪಿನಂಗಡಿ ಪೊಲೀಸರು ಶಾಸಕ ಹರೀಶ್ ಪೂಂಜ ವಿರುದ್ದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ 19 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಶಾಸಕರು ಮೇ.3 ರಂದು ಮಾಡಿದ ಭಾಷಣದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬೆಳ್ತಂಗಡಿ ತಾಲೂಕಿನ ತೆಕ್ಕಾರುಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕರು ಮುಸ್ಲಿಮರ ವಿರುದ್ದ ದ್ವೇಷ ಕಾರಿದ್ದರು.
ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದ ಸಮಯದಲ್ಲಿ ಶಾಸಕರು ಅತ್ಯಂತ ಪ್ರಚೋದನ ಕಾರಿಯಾಗಿ ಮಾತನಾಡಿದ್ದ ಹಿನ್ನಲೆಯಲ್ಲಿ ತರಕ್ಕಾರು ನಿವಾಸಿ ಇಬ್ರಾಹಿಂ ಎಸ್.ಬಿ ಎಂಬವರು ನೀಡಿರುವ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಮೇ.4 ರಂದು ಪ್ರಕರಣದಾಖಲಿಸಿಕೊಂಡಿದ್ದರು.
ಶಾಸಕರು ಪ್ರಕರಣದ ರದ್ದುಪಡಿಸುವಂತೆ ಉಚ್ಚ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು. ಮೇ 20 ರಂದು ಇದರ ವಿಚಾರಣೆ ನಡೆಯಬೇಕಾಗಿತ್ತು.