ಮಂಗಳೂರು: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಸೇರಿದಂತೆ ಕೆಲ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ, ಬುಧವಾರ ಹೊರಡಿಸಿದ್ದ ಆದೇಶವನ್ನು ಚಿಕ್ಕಮಗಳೂರು ಜಿಲ್ಲಾಡಳಿತ ವಾಪಸ್ ಪಡೆದಿದ್ದು, ಪುನಃ ಸಂಚಾರ ಬಂದ್ ಆಗಿದೆ. ಅಪೂರ್ಣ ಕಾಮಗಾರಿ ಕಾರಣದಿಂದ ಚಾರ್ಮಾಡಿ ಘಾಟ್ನಲ್ಲಿ ಮತ್ತೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೋರಿಕೆ ಮೇರೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ಭಾಗದ ಕಾಂಕ್ರಿಟ್ ಕಾಮಗಾರಿ ಮುಕ್ತಾಯಗೊಂಡಿದ್ದರಿಂದ ಮಾ.16ರಿಂದ ಲಘು ಹಾಗೂ ಕೆಲವು ಘನ ವಾಹನಗಳ ಸಂಚಾರಕ್ಕೆ ಅಲ್ಲಿನ ಜಿಲ್ಲಾಡಳಿತ ಅನುಮತಿ ನೀಡಿತ್ತು.
ಆದರೆ ಘಾಟಿ ಪ್ರದೇಶದ ದಕ್ಷಿಣ ಕನ್ನಡ ಭಾಗದಲ್ಲಿ ಕಾಂಕ್ರೀಟ್ ಕಾಮಗಾರಿ ಇನ್ನೂ ನಡೆಯುತ್ತಿದ್ದು, ವಾಹನ ಸಂಚಾರಕ್ಕೆ ರಸ್ತೆ ಮುಕ್ತಗೊಳಿಸಿದ್ದರಿಂದ ಕಾಮಗಾರಿಗೆ ತೊಡಕಾಗಿತ್ತು. ಇನ್ನೂ 15 ದಿನಗಳ ಕಾಲ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೋರಿತ್ತು.
ಬಾಕಿ ಕಾಮಗಾರಿ ಪೂರ್ಣಗೊಳಿಸಲು ಮಾ.16ರ ಆದೇಶವನ್ನು ಚಿಕ್ಕಮಗಳೂರು ಜಿಲ್ಲಾಡಳಿತ ಹಿಂಪಡೆದಿದೆ. ಗುರುವಾರದಿಂದಲೇ ಜಾರಿಗೆ ಬರುವಂತೆ ಅನಿರ್ದಿಷ್ಟ ಕಾಲ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಿದೆ.
ವಾಹನಗಳ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವುದರಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.