Wednesday, June 24, 2026
Homeತಾಜಾ ಸುದ್ದಿಶಿರಾಡಿ ಸಂಚಾರ ನಿಷೇಧದಿಂದ ಚಾರ್ಮಾಡಿಗೆ ಹೆಚ್ಚಿದ ಒತ್ತಡ: ಅಲ್ಲಲ್ಲಿ ಭೂಕುಸಿತ ಆರಂಭ

ಶಿರಾಡಿ ಸಂಚಾರ ನಿಷೇಧದಿಂದ ಚಾರ್ಮಾಡಿಗೆ ಹೆಚ್ಚಿದ ಒತ್ತಡ: ಅಲ್ಲಲ್ಲಿ ಭೂಕುಸಿತ ಆರಂಭ

- Advertisement -
- Advertisement -

ಬೆಳ್ತಂಗಡಿ: ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಸಹಿತ ಸುತ್ತಮುತ್ತ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದು ಒಂದೆಡೆಯಾದರೆ ಸುಳ್ಯ, ಮಡಿಕೇರಿ ಭಾಗದಲ್ಲಿ ಭೂಕಂಪನದಿಂದ 2019ರ ಪ್ರವಾಹದ ನೆನಪನ್ನು ಮರುಕಳಿಸುವಂತೆ ಮಾಡಿದೆ. ಕಾರಣ ಬೆಂಗಳೂರು ಮಂಗಳೂರು ನಗರಕ್ಕೆ ಪ್ರಮುಖ ಸಂಪರ್ಕ ಬೆಸುಗೆಯಾಗಿರುವ ಶಿರಾಡಿ ಹಾಗೂ ಚಾರ್ಮಾಡಿ ಘಾಟಿ ಮತ್ತೆ ಕುಸಿತದ ಮುನ್ಸೂಚನೆ ನೀಡುತ್ತಿದೆ.

2019ರಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹ ಬಂದಿದ್ದಾಗ ರಾಷ್ಟ್ರೀಯ ಹೆದ್ದಾರಿ ಚಾರ್ಮಾಡಿ ಘಾಟಿ ಪ್ರದೇಶವು ಜರ್ಝರಿತ ಗೊಂಡಿತ್ತು. ಚಿಕ್ಕಮಗಳೂರು-ಮಂಗಳೂರು ಸಂಪರ್ಕವೇ ಕಡಿತಗೊಂಡಿತ್ತು. ರಾಷ್ಟ್ರೀಯ ಹೆದ್ದಾರಿ ಚಿಕ್ಕಮಗಳೂರು ಭಾಗದ 6 ಕಡೆ ಸಂಪೂರ್ಣ ರಸ್ತೆ ಹಾಳಾಗಿತ್ತು. ಇದಾದ ಬಳಿಕ ಕಳೆದ ಮೂರು ವರ್ಷಗಳಲ್ಲಿ ಅರಣ್ಯ ಇಲಾಖೆ ಹಾಗೂ ಹೆದ್ದಾರಿ ಇಲಾಖೆ ಸಮಕ್ಷಮದಲ್ಲಿ ಅನೇಕ ಸುತ್ತಿನ ಸಭೆಗಳು ನಡೆದರೂ ಯಾವುದೇ ಪ್ರಯೋಜನವಾಗಿಲ್ಲ. ಇಂದಿಗೂ ಏಕಮುಖ ಸಂಚಾರವನ್ನೇ ಅವಲಂಬಿಸಿದೆ. ಜತೆಗೆ ಭಾರೀ ವಾಹನ ಅಂದರೆ ರಾಜಹಂಸ ಸಹಿತ 6 ಚಕ್ರದಿಂದ ಮೇಲ್ಪಟ್ಟ ವಾಹನಗಳಿಗೆ ಇಂದಿಗೂ ನಿಷೇಧವಿದೆ.

ಶಿರಾಡಿ ಘಾಟಿ ಸಂಚಾರಕ್ಕೆ ಅಡಚಣೆಯಾದಲ್ಲಿ ಚಾರ್ಮಾಡಿ ರಸ್ತೆಯಾಗಿ ಮಂಗಳೂರು ಇಲ್ಲವೇ ಧರ್ಮಸ್ಥಳಕ್ಕೆ ತೆರಳಲು ಪ್ರಮುಖ ರಸ್ತೆಯಾದರೂ ಅಭಿವೃದ್ಧಿಗೆ ಆದ್ಯತೆ ನೀಡಿಲ್ಲ. ಇತ್ತ ದಿಡುಪೆಯಿಂದ ಎಳನೀರು ಆಗಿ ಸಾಗುವ ಪರ್ಯಾಯ ರಸ್ತೆ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಿದ್ದು ರಸ್ತೆ ನಿರ್ಮಾಣಕ್ಕೆ ಅಂಕಿತ ದೊರೆತು ಲೋಕೋಪಯೋಗಿ ಇಲಾಖೆ ಸರ್ವೇ ಕಾರ್ಯ ನಡೆಸಿ ವರದಿ ಸಲ್ಲಿಸಿದೆ. ಇದರ ಪ್ರಗತಿ ಕಾರ್ಯವೂ ಇನ್ನಷ್ಟೇ ಚುರುಕು ಗೊಳ್ಳಬೇಕಿದೆ

ಶಿರಾಡಿ ಘಾಟಿ ಪ್ರದೇಶದಲ್ಲಿ ಈಗಾಗಲೇ ಭೂ ಕುಸಿತಗೊಂಡಿದ್ದು ಕಾರು ಸಹಿತ ಮಿನಿ ಟೆಂಪೋಗಳಿಗೆ ಅವಕಾಶ ನೀಡಲಾಗಿದೆ. ಆದರೆ ರಾಜಹಂಸ ಸಹಿತ ಸಾರಿಗೆ ಬಸ್‌ಗಳು ಹಾಸನ ಬೇಲೂರಿನಿಂದ ಚಾರ್ಮಾಡಿ ಮಾರ್ಗವಾಗಿ ಸಂಚರಿಸಲು ಸೂಚಿಸಲಾಗಿದೆ. ಆದರೆ ಇತ್ತ ಚಾರ್ಮಾಡಿಯಲ್ಲಿ ಗುರುವಾರದಿಂದ ಭಾರೀ ಮಳೆಯಾದ ಪರಿಣಾಮ ಸಣ್ಣ ಮಟ್ಟಿಗೆ ಕುಸಿತ ಉಂಟಾಗಿದೆ. ತತ್‌ಕ್ಷಣ ಮಣ್ಣು ತೆರವು ಕಾರ್ಯವಾದರೂ ರಾತ್ರಿ ಸಂಚಾರ ಅಪಾಯವೇ ಸರಿ. ಈ ಮಧ್ಯೆ ತುರ್ತು ಸ್ಪಂದನೆಗೆ ನಾಲ್ಕು ಜೆಸಿಬಿಗಳನ್ನು ನಿಯೋಜಿಸಲಾಗಿದೆ.

- Advertisement -

Latest News

error: Content is protected !!