ಚಿಕ್ಕಬಳ್ಳಾಪುರ: ಶಿವಮೊಗ್ಗ ತಾಲ್ಲೂಕಿನ ಹುಣಸೋಡು ಕಲ್ಲು ಕ್ವಾರೆ ಪ್ರದೇಶದಲ್ಲಿ ಸ್ಪೋಟ ಸಂಭವಿಸಿದ ಘಟನೆ ಮಾಸುವ ಮೊದಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದ ಬಳಿ ಜಿಲೆಟಿನ್ ಸ್ಪೋಟ ದುರಂತ ಸಂಭವಿಸಿದೆ.
ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ 12 ಗಂಟೆಗೆ ಭಾರೀ ಸ್ಪೋಟ ಸಂಭವಿಸಿ ಐವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೂರಾರು ಮೀಟರ್ ದೂರದವರೆಗೆ ಮೃತದೇಹಗಳು ಬಿದ್ದಿದ್ದು ಇನ್ನೂ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಪೋಟದಲ್ಲಿ ಮೃತಪಟ್ಟವರ ಪೈಕಿ ನಾಲ್ವರ ಮಾಹಿತಿ ಗೊತ್ತಾಗಿದೆ. ಕಂಪ್ಯೂಟರ್ ಆಪರೇಟರ್ ಗಳಾದ ರಾಮು, ಗಂಗಾಧರ, ಇಂಜಿನಿಯರ್ ಉಮಾಕಾಂತ್ ಮತ್ತು ಸ್ಥಳೀಯ ವ್ಯಕ್ತಿ ರಾಮು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ರಾತ್ರಿ 12.45ರ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಇಲ್ಲಿಯ ಭ್ರಮರವರ್ಷಿಣಿ ಕ್ವಾರಿ ಬ್ಲಾಸ್ಟಿಂಗ್ಗೆ ಅಕ್ರಮವಾಗಿ ಸ್ಫೋಟಕ ಸಂಗ್ರಹ ಮಾಡಲಾಗಿತ್ತು. ಕೆಲ ದಿನಗಳ ಹಿಂದೆ ಪೊಲೀಸರು ದಾಳಿ ನಡೆಸಿದ್ದ ಹಿನ್ನೆಲೆ ಸ್ಫೋಟಕವನ್ನು ಅರಣ್ಯದಲ್ಲಿ ಬಚ್ಚಿಡಲಾಗಿತ್ತು. ಬಚ್ಚಿಟ್ಟಿದ್ದ ಸ್ಫೋಟಕ ಸಾಗಿಸಲು ತೆರಳಿದ್ದಾಗ ಘಟನೆ ನಡೆದಿದೆ ಎಂದು ಘಟನೆಯಲ್ಲಿ ಗಾಯಗೊಂಡು ಬದುಕುಳಿದಿರುವ ರಿಯಾಜ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಬಳಿ ಜಿಲೆಟಿನ್ ಸ್ಪೋಟದಿಂದ ಹತ್ತಾರು ಕಿಲೋಮೀಟರ್ ದೂರದವರೆಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಜನ ಭೂಕಂಪ ಎಂದು ಭಾವಿಸಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ನಂತರ ಜಿಲೆಟಿನ್ ಸ್ಪೋಟ ಸಂಭವಿಸಿದೆ ಎನ್ನುವ ಮಾಹಿತಿ ಗೊತ್ತಾಗಿದೆ. ಹಿರೇನಾಗವೇಲಿ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ.