
ಚಿಕ್ಕಮಗಳೂರು : ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ಬೃಹತ್ ಗಾತ್ರದ ದಂತ ಹೊಂದಿದ್ದ ಗಂಡಾನೆಯೊಂದು ಮೃತಪಟ್ಟಿರುವ ಘಟನೆ ಜು.3 ರಂದು ಬೆಳಕಿಗೆ ಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಆನೆ ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೆ ಮೃತಪಟ್ಟಿದ್ದ ಸ್ಥಳದಲ್ಲಿ ಪಂಚನಾಮೆ ನಡೆಸಿ, ಸಾವಿನ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ.ಮೀಸಲು ಅರಣ್ಯದೊಳಗೆ ವಿದ್ಯುತ್ ಸಂಪರ್ಕ ಹೇಗೆ ಬಂದಿತು ಎಂಬುದು ಅಧಿಕಾರಿಗಳ ತನಿಖೆಯ ಪ್ರಮುಖ ಅಂಶವಾಗಿದೆ. ಅಕ್ರಮ ವಿದ್ಯುತ್ ಸಂಪರ್ಕದ ಮೂಲಕ ಕಾಡಾನೆ ವಿದ್ಯುತ್ ಶಾಕ್ಗೆ ಒಳಗಾಗಿರಬಹುದೇ ಎಂಬ ಅನುಮಾನವೂ ವ್ಯಕ್ತವಾಗಿದೆ.
ಈ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಅರಣ್ಯ ಇಲಾಖೆ ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರಿಸಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಆನೆಯ ಸಾವಿನ ನಿಖರ ಕಾರಣ ತಿಳಿಯುವ ಸಾಧ್ಯತೆ ಇದೆ.


