ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಮತ್ತು ಪ್ರಿಯಕರನಿಗೆ ನ್ಯಾಯಾಂಗ ಬಂಧನ ವಿಧಿಸಲ್ಪಟ್ಟಿದೆ.
ಸೆಪ್ಟೆಂಬರ್ 13 ರಂದು ಅಮಾವಾಸ್ಯೆಬೈಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ ಇದಾಗಿದ್ದು, ಆರೋಪಿ ತಾಯಿ ಪೂರ್ಣ ಪ್ರಿಯಾ ಅನಾರೋಗ್ಯದ ಕಾರಣ ನೀಡಿ ಮಗುವನ್ನು ಉಡುಪಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಮಗುವಿನ ಮೈ ಮೇಲಿನ ಗಾಯಗಳ ಬಗ್ಗೆ ಪೂರ್ಣಪ್ರಿಯಾ ಯಾವುದೇ ಮಾಹಿತಿ ನೀಡಿರಲಿಲ್ಲ. ಹೀಗಾಗಿ ಅನುಮಾನಗೊಂಡಿದ್ದ ಜಿಲ್ಲಾ ಆರೋಗ್ಯಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು.
ಮಗು ಚೇತರಿಸಿಕೊಂಡ ಬಳಿಕ ಮಾಹಿತಿ ಪಡೆದಿದ್ದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಅಮವಾಸ್ಯೆಬೈಲು ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಮಗುವಿನ ತಂದೆ ಕೆಲವು ಸಮಯದ ನಿಧನರಾಗಿದ್ದು, ಬಳಿಕ ತಾಯಿ ಪೂರ್ಣಪ್ರಿಯಾ ತನ್ನ ಪ್ರಿಯಕರ ಸುಹೇಲ್ ಜೊತೆ ಸಂಪರ್ಕದಲ್ಲಿದ್ದು, ಮಗು ಮಂಚದಲ್ಲಿ ಮಲಗುವ ವಿಷಯಕ್ಕೆ ಸಂಬಂಧಿಸಿದಂತೆ ತಾಯಿ ಮತ್ತು ಪ್ರಿಯಕರ ಅಮಾನುಷವಾಗಿ ಹಲ್ಲೆ ನಡೆಸಿದ್ದರು.
ಅಕ್ಟೋಬರ್ 24ರಂದು ಜಾಮೀನಿಗೆ ಅರ್ಜಿ ಸಲ್ಲಿಸಿ ನ್ಯಾಯಾಲಯಕ್ಕೆ ಶರಣಾಗಿದ್ದ ಆರೋಪಿಗಳಿಗೆ
ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ನಂತರ ಪ್ರಕರಣದ ಗಂಭೀರತೆಯನ್ನು ಮನಗಂಡು ನ್ಯಾಯಾಲಯ ಜಾಮೀನು ರದ್ದು ಮಾಡಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.