ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಇಂದು ಬೆಂಗಳೂರಿನಲ್ಲಿ ನಡೆದ ನಾಗರಿಕ ಸತ್ಕಾರದಲ್ಲಿ ಭಾಷಣದ ವೇಳೆ ರಾಷ್ಟ್ರಪತಿಗಳು ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರನ್ನು ನೆನಪಿಸಿಕೊಂಡಿದ್ದಾರೆ.
ಮೂರು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ರಾಷ್ಟ್ರಪತಿಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಸಂಜೆ ರಾಜ್ಯ ಸರ್ಕಾರದ ವತಿಯಿಂದ ನಾಗರಿಕ ಸತ್ಕಾರ ಏರ್ಪಡಿಸಲಾಗಿತ್ತು.
ನಾಗರಿಕ ಸತ್ಕಾರ ಸ್ವೀಕರಿಸಿ ಮಾತನಾಡಿದ ದ್ರೌಪದಿ ಮುರ್ಮು, ರಾಣಿ ಅಬ್ಬಕ್ಕ, ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಮೊದಲಾದವರು ಸ್ವಾತಂತ್ರ್ಯಕ್ಕಾಗಿ ಪ್ರಾಣಾರ್ಪಣೆ ಮಾಡಿದ್ದಾರೆ ಎಂದು ಸ್ಮರಿಸಿಕೊಂಡರು.
ನಾಗರಿಕ ಸತ್ಕಾರದ ವೇಳೆ ರಾಷ್ಟ್ರಪತಿಗಳಿಗೆ ಮೈಸೂರು ಪೇಟ, ಶ್ರೀಗಂಧದ ಹಾರ ಮತ್ತು ಶ್ರೀಗಂಧದ ಬುದ್ಧನ ಮೂರ್ತಿ ನೀಡಿ ರಾಜ್ಯ ಸರ್ಕಾರದ ವತಿಯಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು. ಮೂರು ದಿನಗಳ ರಾಜ್ಯ ಪ್ರವಾಸ ಮುಗಿಸಿ ನಾಳೆ ಬೆಳಗ್ಗೆ ದ್ರೌಪದಿ ಮುರ್ಮು ಬೆಂಗಳೂರಿನಿಂದ ದೆಹಲಿಗೆ ನಿರ್ಗಮಿಸಲಿದ್ದಾರೆ.