ಕೊರಿಯಾವು ಎಲೆಕ್ಟ್ರಾನಿಕ್ಸ್ ಮತ್ತು ಆಟೋಮೊಬೈಲ್ ತಯಾರಿಕಾ ಕ್ಷೇತ್ರದಲ್ಲಿ ದೈತ್ಯನೆನಿಸಿಕೊಂಡಿದ್ದು, ಗಣರಾಜ್ಯದ ಜೊತೆಗಿನ ಬಾಂಧವ್ಯ ಬಲಗೊಳ್ಳುವುದರಿಂದ ಕರ್ನಾಟಕದ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಅವರು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ತಮ್ಮನ್ನು ಭೇಟಿ ಮಾಡಿದ ಕೊರಿಯಾ ಗಣರಾಜ್ಯದ ರಾಯಭಾರಿ ಜೇ-ಬಾಕ್ ಚಾಂಗ್ ಅವರ ನೇತೃತ್ವದ ನಿಯೋಗದೊಂದಿಗೆ ಬಸವರಾಜ ಬೊಮ್ಮಾಯಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.
“ಕೊರಿಯಾ ಗಣರಾಜ್ಯವು ನೂತನ ತಂತ್ರಜ್ಞಾನಗಳ ಬಳಕೆ ಮಾಡಿಕೊಂಡು ಅತ್ಯುತ್ತಮ ಉತ್ಪನ್ನಗಳನ್ನು ತಯಾರಿಸುತ್ತಿದೆ. ಕರ್ನಾಟಕ ರಾಜ್ಯವು ಕೊರಿಯಾದೊಂದಿಗೆ ಹಲವು ದಶಕಗಳ ನಂಟು ಹೊಂದಿರುವುದು ಹೆಮ್ಮೆಯ ವಿಷಯ. ” ಎಂದು ಮುಖ್ಯಮಂತ್ರಿಗಳು ಶ್ಲಾಘಿಸಿದರು.
“ಅತ್ಯುತ್ತಮ ಮಾನವ ಸಂಪನ್ಮೂಲ ಹಾಗೂ ಕಾರ್ಮಿಕರ ಲಭ್ಯತೆ ಮತ್ತಿತರ ಅಂಶಗಳು ಭಾರತವನ್ನು ಹೂಡಿಕೆದಾರರ ಆಕರ್ಷಣೆಯ ತಾಣವಾಗಿಸಿವೆ. ಪ್ರಸಕ್ತ ದಿನಮಾನದಲ್ಲಿ ಭಾರತ ಹಾಗೂ ಕರ್ನಾಟಕ ರಾಜ್ಯ ಅತ್ಯಂತ ಪ್ರಬಲ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿವೆ. ಅದರಲ್ಲೂ ಕರ್ನಾಟಕ ರಾಜ್ಯ ದೇಶದ ಶೇ. 38ರಷ್ಟು ವಿದೇಶಿ ನೇರ ಹೂಡಿಕೆಯನ್ನು ಆಕರ್ಷಿಸುವ ಮೂಲಕ ಮೊದಲ ಸ್ಥಾನದಲ್ಲಿದೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇನ್ನು ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿವೆ. ರಾಜ್ಯವು ತಂತ್ರಜ್ಞಾನ ಆಧಾರಿತ ಉದ್ಯಮಿಗಳ ನೆಲೆಯಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ದಕ್ಷಿಣ ಕೊರಿಯಾ ಕೈಜೋಡಿಸಿದಲ್ಲಿ ಆರ್ಥಿಕ ಅಭಿವೃದ್ಧಿ ದೃಷ್ಟಿಯಿಂದ ಇಬ್ಬರಿಗೂ ಅನುಕೂಲವಾಗಲಿದೆ” ಎಂದು ಬೊಮ್ಮಾಯಿ ಹೇಳಿದರು.
ಇದೇ ವೇಳೆ ನವೆಂಬರ್ನಲ್ಲಿ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿಟ್ ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿಯೂ ಕೊರಿಯಾದ ರಾಯಭಾರಿಗಳು ಭಾಗವಹಿಸುವಂತೆ ಮುಖ್ಯಮಂತ್ರಿಗಳು ಆಹ್ವಾನ ನೀಡಿದರು. ಇದಕ್ಕೂ ಮುನ್ನ ಮಾತನಾಡಿದ ಕೊರಿಯಾದ ರಾಯಭಾರಿ ಜೇ-ಬಾಕ್ ಚಾಂಗ್, “ನಮ್ಮ ದೇಶ ಕರ್ನಾಟಕದೊಂದಿಗೆ ಆರ್ಥಿಕ ಹಾಗೂ ವಾಣಿಜ್ಯ ಸಂಬಂಧಗಳನ್ನು ವಿಸ್ತರಿಸಲು ಉತ್ಸುಕವಾಗಿದೆ. ಹಲವು ಸ್ಟಾರ್ಟ್ ಅಪ್ಗಳು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಆಸಕ್ತಿ ಹೊಂದಿವೆ” ಎಂದು ತಿಳಿಸಿದರು.