ಬೆಂಗಳೂರು: ರಾಜ್ಯದ ಯಾವೆಲ್ಲಾ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದಿರಾ ಕ್ಯಾಂಟೀನ್ ಪುನರಾರಂಭಿಸುವ ಕುರಿತಂತೆ ನಡೆಸಿದ ಸಭೆಯಲ್ಲಿ ಸಿದ್ದರಾಮಯ್ಯ ಈ ಸೂಚನೆ ನೀಡಿದ್ದಾರೆ.
ಬೆಂಗಳೂರು ಹೊರತುಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇಕಡಾ 70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇಕಡಾ 30 ರಷ್ಟು ಭರಿಸಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಬೆಂಗಳೂರಿನಲ್ಲಿ ಪ್ರತಿ ವಾರ್ಡ್ ಗೆ ಒಂದರಂತೆ 250 ಕ್ಯಾಂಟೀನ್ ತೆರೆಯಲು ತೀರ್ಮಾನಿಸಲಾಗಿದ್ದು, ಇಲ್ಲಿಯವರೆಗೂ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ ಶೇಕಡಾ 70 ಹಾಗೂ ಸರ್ಕಾರದಿಂದ ಶೇಕಡಾ 30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇಕಡಾ 50 ರಷ್ಟು ಹಾಗೂ ರಾಜ್ಯ ಸರ್ಕಾರ ಶೇಕಡಾ 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ.
ಇದರ ಜೊತೆಗೆ ಇಂದಿರಾ ಕ್ಯಾಂಟಿನ್ ನಲ್ಲಿ ವಿತರಿಸುವ ಆಹಾರ ಕ್ರಮದಲ್ಲಿ ಬದಲಾವಣೆ ಮಾಡುವ ಕುರಿತೂ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.