ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಜೊತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಸಭೆ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪಾಸಿಟಿವಿಟಿ ಪ್ರಮಾಣ ಇಳಿಸಬೇಕು. ಅದಕ್ಕಾಗಿ ಮನೆಯಲ್ಲಿರುವ ಕೋವಿಡ್ ಸೋಂಕಿತರನ್ನು ವೈಜ್ಞಾನಿಕ ರೀತಿಯಲ್ಲಿ ವಿಂಗಡಿಸಿ ವಾರದೊಳಗೆ ಕೋವಿಡ್ ಕೇರ್ ಸೆಂಟರ್ಗೆ ಸ್ಥಳಾಂತರ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ಒಂದು ತಿಂಗಳಿನಿಂದ ಕೋವಿಡ್ ಸಂಖ್ಯೆ ಹೆಚ್ಚುತ್ತಿದೆ. ಸಕ್ರಿಯ ಪ್ರಕರಣಗಳಲ್ಲಿ ಶೇ.90 ಮಂದಿ ಮನೆಯಲ್ಲೇ ಇದ್ದಾರೆ. ಇದು ಸೋಂಕು ಹರಡಲು ಕಾರಣವಾಗುತ್ತಿದೆ. ಆದ್ದರಿಂದ ಈ ಸಮಸ್ಯೆಗೆ ತಕ್ಷಣ ಕಠಿಣ ಕ್ರಮ ಕೈಗೊಳ್ಳಿ ಎಂದರು.
ಸಂಭಾವ್ಯ ಕೋವಿಡ್ ಮೂರನೇ ಅಲೆ ನಿಯಂತ್ರಿಸಲು ಎಲ್ಲ ತಾಲೂಕಿನಲ್ಲಿ ಆಕ್ಸಿಜನ್ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಿದರು.
ಸಭೆಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಸಚಿವರು, ಶಾಸಕರು, ಇತರೆ ಚುನಾಯಿತ ಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.