ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ ತಂಡಕ್ಕೆ ಮುಖ್ಯಮಂತ್ರಿ ಪದಕ ಕೊಟ್ಟು ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವರು, ನಮ್ಮ ಪೊಲೀಸರು ಅಚ್ಚುಕಟ್ಟಾಗಿ ತನಿಖೆ ಮಾಡಿದ್ದು, ಪ್ರಕರಣದ ತನಿಖೆ ನಮ್ಮ ಪೊಲೀಸ್ ಇಲಾಖೆಗೆ ಕೀರ್ತಿ ತಂದಿದೆ ಎಂದು ಹೇಳಿದ್ದಾರೆ.
ಇದೇ ವೇಳೆ, ಪ್ರಜ್ವಲ್ ಪ್ರಕರಣವನ್ನು ರಾಜಕೀಯ ದೃಷ್ಟಿಯಿಂದ ನೋಡಲೇಬಾರದು ಎಂದಿರುವ ಡಾ. ಪರಮೇಶ್ವರ್, ಪೊಲೀಸರ ಶ್ರಮವನ್ನು ರಾಜ್ಯ ಸರ್ಕಾರ ಪ್ರಶಂಸೆ ಮಾಡುತ್ತದೆ ಎಂದು ಹೇಳಿದ್ದಾರೆ.
ಐಪಿಎಸ್ ಅಧಿಕಾರಿ ಬಿಜಯ್ ಕುಮಾರ್ ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣವನ್ನು ತನಿಖೆ ನಡೆಸಿತ್ತು.
ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅಪರಾಧಿ ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಸೆರೆವಾಸ ವಿಧಿಸಿ ತೀರ್ಪು ನೀಡಿತ್ತು.
ಇತ್ತ ಪುತ್ರನಿಗೆ ಕೋರ್ಟ್ ನಿಂದ ಶಿಕ್ಷೆ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ಕುಟುಂಬ ಮೌನಕ್ಕೆ ಶರಣಾಗಿದ್ದು, ಇಂದೂ ಕೂಡಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.


