ಮಂಗಳೂರು: ಕರಾವಳಿ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸುವ ದೃಷ್ಟಿಯಿಂದ ಕರಾವಳಿ ಇನ್ವೆಸ್ಟರ್ಸ್ ಮೀಟ್ ಆಯೋಜಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಡಲ ತೀರಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಆನಂದ್ ಸಿಂಗ್, ಈ ಮೂಲಕ ಈ ಭಾಗದ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹೆಜ್ಜೆ ಇಡಲಾಗಿದೆ ಎಂದು ತಿಳಿಸಿದ್ದಾರೆ.
ಕರಾವಳಿ ಇನ್ವೆಸ್ಟರ್ ಮೀಟ್ ಗೆ ಮೊದಲ ಆದ್ಯತೆ ನೀಡುವ ಮೂಲಕ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಈ ಭಾಗಕ್ಕೆ ಆಕರ್ಷಿಸಲಾಗುವುದು. ಇನ್ವೆಸ್ಟರ್ ಮೀಟ್ ಏರ್ಪಡಿಸುವುದರಿಂದ ಕರಾವಳಿ ಪ್ರವಾಸೋದ್ಯಮ ಸ್ಥಳದಲ್ಲಿ ಬಂಡವಾಳ ಹೂಡಿಕೆಯಾಗುತ್ತದೆ. ಇದರೊಂದಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ಸೃಷ್ಟಿ ಆಗುವುದರ ಜತೆಗೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.
ಇದೇ ವೇಳೆ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಆರ್ ಝೆಡ್ ತೊಂದರೆಯಾಗಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಲಾಗಿದೆ. ಇನ್ನೆರಡು ತಿಂಗಳಲ್ಲಿ ಆ ಸಮಸ್ಯೆ ಬಗೆಹರಿಸಿಕೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವರು ತಿಳಿಸಿದ್ದಾರೆ.