
ಬೆಂಗಳೂರು ವಿಧಾನಸೌಧದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ಅಮೆರಿಕದಿಂದ ಹಣ ಪಡೆದು ದೇಶದಲ್ಲಿ ‘ಜಿರಳೆ ಪಾರ್ಟಿ’ (CJP) ಆರಂಭಿಸಲಾಗಿದ್ದು, ಇದರ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಷಡ್ಯಂತ್ರ ಹೆಣೆಯಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ನೀಟ್ ಪರೀಕ್ಷೆಯ ನೆಪದಲ್ಲಿ ಹೋರಾಟ ನಡೆಸಿ ವಿದ್ಯಾರ್ಥಿಗಳ ಬಗ್ಗೆ ಹುಸಿ ಕಾಳಜಿ ತೋರಿಸುತ್ತಿವೆ ಎಂದ ಅವರು, ಲೋಕಸಭೆಯಲ್ಲಿ ಮಾತನಾಡಬೇಕಾದ ವಿಪಕ್ಷ ನಾಯಕ ರಾಹುಲ್ ಗಾಂಧಿ ಬೀದಿಗಿಳಿದು ನಾಟಕ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಅಲ್ಲದೆ, ರಾಹುಲ್ ಗಾಂಧಿ ಜಿರಳೆ ಪಾರ್ಟಿಯೊಂದಿಗೆ ಕೈಜೋಡಿಸಿ, ಅಂಡಮಾನ್ಗೆ ಹೋಗಿ ಪರಿಸರ ಉಳಿಸುವ ಪ್ರತಿಭಟನೆ ಮಾಡುತ್ತಾರೆಯೇ ಹೊರತು, ತೀವ್ರ ಬರಗಾಲ ಎದುರಿಸುತ್ತಿರುವ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂದು ಕಿಡಿಕಾರಿದರು. ಜೊತೆಗೆ, ಕೇಂದ್ರ ಸರ್ಕಾರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ಮೊದಲೇ ರಾಜ್ಯ ಸರ್ಕಾರ ತನ್ನ ಮಟ್ಟದಲ್ಲಿ ಬರ ಘೋಷಣೆ ಮಾಡಬೇಕಿತ್ತು ಎಂದು ರಾಜ್ಯ ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದರು.


