ಮಂಗಳೂರು; ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರೋದನ್ನು ವಿರೋಧಿಸಿ ರಾಜ್ಯದಾದ್ಯಂತ ಇಂದು ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.ಆದರೆ ಮಂಗಳೂರಿನಲ್ಲಿ ಪ್ರತಿಭಟನೆ ಹಿಂಸಾಸ್ವರೂಪ ಪಡೆದುಕೊಂಡಿದೆ.
ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ರಾಜ್ಯಪಾಲರ ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭ ಉದ್ವಿಗ್ತರು ಖಾಸಗಿ ಸಿಟಿ ಬಸ್ ಗೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಬಸ್ ನ ಮುಂಭಾಗದ ಗಾಜು ಹುಡಿಯಾಗಿದೆ. ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನನಾಕರರನ್ನು ಹತೋಟಿಗೆ ತಂದಿದ್ದಾರೆ
‘ಬಸ್ನಲ್ಲಿ ಹತ್ತು ಮಂದಿ ಪ್ರಯಾಣಿಕರಿದ್ದರು. ಚಾಲಕ ಸೀಟಿನ ಹಿಂದೆ ಕುಳಿತ್ತಿದ್ದ ಮಹಿಳೆಗೆ ಗಾಯವಾಗಿದೆ. ನಾಲ್ವರು ಸೇರಿ ಕಲ್ಲು ತೂರಿದ್ದಾರೆ. ಈ ಬಸ್ ನೌಫಾಲ್ ಎಂಬ ಬಿಜೆಪಿ ನಾಯಕರಿಗೆ ಸೇರಿದ್ದು. ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ನಡೆಸಲಾಗಿದೆ’ ಎಂದು ಬಸ್ ಸಿಬ್ಬಂದಿ ತಿಳಿಸಿದರು.
ಇದೇ ಸಂದರ್ಭ ಟೈರುಗಳಿಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ.