ಬೆಂಗಳೂರು: ಕೋವಿಡ್ -19 ಸೋಂಕು ರಾಜ್ಯದಲ್ಲಿ ಮತ್ತೆ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಕೋವಿಡ್ ಮಾರ್ಗಸೂಚಿಗಳನ್ನು ಆಗಸ್ಟ್ 16 ರವರೆಗೂ ಮುಂದುವರಿಸಲಾಗಿದೆ. ಆಗಸ್ಟ್ 16 ನೇ ತಾರೀಕಿನ ಬೆಳಗ್ಗೆ 6 ಗಂಟೆಯವರೆಗೆ ಮಾರ್ಗಸೂಚಿಗಳನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸೋಂಕು ಹೆಚ್ಚಾಗುತ್ತಿರುವ ಕಾರಣ ಅಗತ್ಯ ಬಿದ್ದಲ್ಲಿ ತಮ್ಮ ತಮ್ಮ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚುವರಿ ಕಂಟೈನ್ ಮೆಂಟ್ ಕ್ರಮಗಳನ್ನು ಕೈಗೊಳ್ಳುವಂತೆಯೂ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.
ಇದಲ್ಲದೇ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಸಂಪರ್ಕಿಸುವ ಜಿಲ್ಲೆಗಳ ಗಡಿಗಳಲ್ಲಿ ಪರಿವೀಕ್ಷಣೆಗೆ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಲಾಗಿದೆ.
ಇನ್ನು ಕಾಂಟ್ಯಾಕ್ಟ್ ಟ್ರೇಸಿಂಗ್, ಮನೆ ಮನೆ ಪರಿವೀಕ್ಷಣೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತಗಳಿಗೆ ಸ್ವಾತಂತ್ರ್ಯ ನೀಡಲಾಗಿದೆ.
ವಿಸ್ತರಿತ ಮಾರ್ಗಸೂಚಿ ಹೊರಡಿಸಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮಾರ್ಗಸೂಚಿ ಕಡ್ಡಾಯ ಪಾಲಿಸಲು ತಿಳಿಸಿದ್ದು, ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.