ಮಾಣಿ :ಒಂದೇ ದಿನದಲ್ಲಿ 816 ಡೋಸ್ ಕೋವಿಡ್ ಲಸಿಕೆಗಳನ್ನು ನೀಡುವ ಮೂಲಕ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರ ತಾಲೂಕಿನಲ್ಲಿಯೇ ದಾಖಲೆಯನ್ನು ಬರೆದಿದೆ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.

ಮಾಣಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ, ಮಾಣಿ, ಕಡೇಶಿವಾಲಯ ಮತ್ತು ಬಾಳ್ತಿಲ ವಲಯದ ಶಿಕ್ಷಕ ಶಿಕ್ಷಕಿಯರ ಕೋವಿಡ್ ಲಸಿಕಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರಂಭದ ದಿನಗಳಲ್ಲಿ ಮತ್ತು ಈಗಲೂ ಆರೋಗ್ಯ ಕೇಂದ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಶಿಬಿರಗಳನ್ನು ಆಯೋಜಿಸಿದ್ದು, ಆಸ್ಪತ್ರೆಯಲ್ಲಿಯೂ ಕೂಡಾ ನಿರಂತರವಾಗಿ ಕೋವಿಡ್ ಲಸಿಕೆಗಳನ್ನು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿಯೂ ಈ ಪ್ರಕ್ರಿಯೆ ಸುಸೂತ್ರವಾಗಿ ನಡೆಸುವಲ್ಲಿ ಮಾಣಿ ಗ್ರಾಮ ಪಂಚಾಯತ್ ಪ್ರಾಥಮಿಕ ಆರೋಗ್ಯ ಕೇಂದ್ರದ ಜೊತೆಗೆ ಕೈಜೋಡಿಸುತ್ತದೆ.
ಕೋವಿಡ್ ಲಸಿಕೆಯ ಬಗ್ಗೆ ಮುತುವರ್ಜಿಯನ್ನು ವಹಿಸುತ್ತಿರುವ ವೈದ್ಯಾಧಿಕಾರಿ ಡಾ ಶಶಿಕಲಾ ಮತ್ತು ಸಿಬ್ಬಂದಿ ವರ್ಗದ ಬಂಧುಗಳಿಗೆ ಗ್ರಾಮ ಪಂಚಾಯತ್ ಪರವಾಗಿ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ ಎಂದು ಅವರು ಹೇಳಿದರು.
ಮಾಣಿ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್ ರವರು ಶಿಬಿರದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲರನ್ನೂ ಸ್ವಾಗತಿಸಿದರು. ಮಾಣಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಸುದೀಪ್ ಕುಮಾರ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ, ಕಡೇಶಿವಾಲಯ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಸುಧಾಕರ ಭಟ್, ಮುಖ್ಯ ಶಿಕ್ಷಕಿ ಚಂದ್ರಾವತಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಮಾಣಿ, ಶಿಕ್ಷಕ ಶಿಕ್ಷಕಿಯರು, ಆರೋಗ್ಯ ಸಹಾಯಕಿಯರು, ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.


