ಬೆಂಗಳೂರು: ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನಾನೇ ಸ್ಟ್ರಾಂಗ್ ಎನ್ನುವ ಸಿದ್ದರಾಮಯ್ಯನವರಿಗೇ 5 ವರ್ಷ ಸಿಎಂ ಆಗಿರುವ ಖಾತರಿಯೇ ಇಲ್ಲ,’ ಎಂದು ಕಾಲೆಳೆದರು.
`ಸಿದ್ದರಾಮಯ್ಯರ ಕಳೆದೊಂದು ವರ್ಷವನ್ನು ಗಮನಿಸಿದರೆ, ಆಡಳಿತದ ಹಿಡಿತವೇ ಅವರಿಗೆ ಸಿಕ್ಕಿಲ್ಲ ಎಂದು ಅರಿವಾಗುತ್ತದೆ. ನೀವೇ ನೇಮಕ ಮಾಡಿಕೊಂಡ ರಾಜಕೀಯ ಕಾರ್ಯದರ್ಶಿ, ಮುಖ್ಯಮಂತ್ರಿಗಳ ಸಲಹೆಗಾರರು ‘ಅಭಿವೃದ್ಧಿಗೆ ಬಿಡಿಗಾಸೂ ಕೊಡುತ್ತಿಲ್ಲ’ ಎಂದು ನಿಮ್ಮ ಗುಣಗಾನ ಮಾಡಿದ್ದಾರೆ. ‘ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂದು ಹೇಳಿಸಿಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ ಎಂದು ವ್ಯಂಗ್ಯವಾಡಿದರು.
ನಿಮ್ಮ ಹಿರಿಯ ಸಚಿವರು, ಶಾಸಕರೇ ನಿಮ್ಮ ಸ್ಟ್ರಾಂಗ್ ಆಡಳಿತಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಮಹಿಳಾ ದೌರ್ಜನ್ಯ ಮಾತ್ರವಲ್ಲ ಬೆತ್ತಲೆ ಮೆರವಣಿಗೆ ನಡೆಯುತ್ತಿದೆ. ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಆಗುತ್ತದೆ. ಹನುಮಾನ್ ಚಾಲೀಸ ಹಾಕುವುದು ಕೂಡ ಗಲಭೆಗೆ ಕಾರಣವಾಗುವಷ್ಟು ಆಡಳಿತ ಹದಗೆಟ್ಟಿದೆ ಎಂದು ಜರಿದರು.
ಮುಖ್ಯಮಂತ್ರಿಗಳ ಜೊತೆಗೆ ಶ್ಯಾಡೋ ಮುಖ್ಯಮಂತ್ರಿ, ಸೂಪರ್ ಸಿಎಂ- ಇವರೆಲ್ಲರೂ ಸಕ್ರಿಯರಾಗಿದ್ದಾರೆ. ಮುಖ್ಯಮಂತ್ರಿ ದುರ್ಬಲವಾಗಿದ್ದಾರೆ ಎಂದೇ ಇದರ ಅರ್ಥ ಅಲ್ವಾ ಎಂದು ವಿಶ್ಲೇಷಣೆ ಮಾಡಿದರು.