
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ನವದೆಹಲಿಯಲ್ಲಿ ಇಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡಿಗೆ 3600 ಕ್ಯೂಸೆಕ್ ನೀರು ಹರಿಸುವಂತೆ ಅದೇಶ ಮಾಡಲಾಗಿದೆ.
ಕಾವೇರಿ ನೀರು ನಿಯಂತ್ರಣ ಆಯೋಗ ಮಾಡಿದ್ದ ಶಿಫಾರಸು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಆದೇಶವಾಗಿ ಮಾರ್ಪಟ್ಟಿದ್ದು, ಕರ್ನಾಟಕದ ವಾದ ಮಂಡನೆಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಇಂದಿನ ಸಭೆಯಲ್ಲಿ ಕರ್ನಾಟಕದ ಪರವಾಗಿ ಭಾಗವಹಿಸಿದ್ದರು.
ಸಿಡಬ್ಲ್ಯುಎಂಎ ಆದೇಶ ಹೊರಬೀಳುತ್ತಿದ್ದಂತೆಯೇ ನೀರು ಹರಿಸದಂತೆ ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಜೋರಾಗಿದ್ದು, ಆಗಸ್ಟ್ 2 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ವಪಕ್ಷದ ಸಭೆ ನಡೆಯಲಿದೆ.
ಇದೇ ವೇಳೆ, ಕರ್ನಾಟಕ ಬಂದ್ ನಡೆಸಲು ಕನ್ನಡ ಪರ ಸಂಘಟನೆಗಳು ಸಿದ್ಧತೆ ನಡೆಸಿದ್ದು, ನಾಳೆ ವಿಪಕ್ಷ ಬಿಜೆಪಿ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆಯನ್ನೂ ನಡೆಸಲಿದೆ.


