ಬೆಂಗಳೂರು: ರಾಜ್ಯ ಸರಕಾರದ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸುಳ್ಯ ಶಾಸಕ ಎಸ್.ಅಂಗಾರ ಅವರನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭೇಟಿಯಾಗಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಜೊತೆಗೆ ಅವರ ಪತ್ನಿ ಡಾಟಿ ಸದಾನಂದ ಗೌಡ, ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರಾದ ಉದ್ಯಮಿ ಅಶೋಕ್ ಕುಮಾರ್ ರೈ ಅವರೂ ಕೂಡಾ ಅಭಿನಂದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಉಪಸ್ಥಿತರಿದ್ದರು.
ಇನ್ನು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕುವ ಮೂಲಕ ಅಂಗಾರ ಅವರನ್ನು ಡಿವಿಎಸ್ ಅಭಿನಂದಿಸಿದ್ದಾರೆ. ಪಕ್ಷದ ನಿಷ್ಠಾವಂತ ಹಾಗೂ ನೂತನ ಸಚಿವರಾದ ನನ್ನ ಆತ್ಮೀಯ ಮಿತ್ರ ಶ್ರೀ ಎಸ್ ಅಂಗಾರ ಅವರನ್ನು ಬೆಂಗಳೂರಿನ ನನ್ನ ನಿವಾಸಕ್ಕೆ ಬರಮಾಡಿಕೊಂಡು ಸನ್ಮಾನಿಸಲಾಯಿತು. 1994ರಲ್ಲಿ ಅವರು ಸುಳ್ಯದಿಂದ ಹಾಗೂ ನಾನು ಪಕ್ಕದ ಪುತ್ತೂರು ಕ್ಷೇತ್ರದಿಂದ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಶ್ರೀಯುತ ಅಂಗಾರರಿಗೆ ಮತ್ತೊಮ್ಮೆ ಹೃತ್ಪೂರ್ವಕ ಅಭಿನಂದನೆಗಳು. ಅವರಿಗೆ ಸುದೀರ್ಘವಾಗಿ ಜನಸೇವೆ ಮಾಡುವ ಅವಕಾಶ ಸಿಗಲಿ ಹಾಗೂ ಎಲ್ಲವೂ ಶುಭವಾಗಲಿ ಎಂದು ಹಾರೈಸುತ್ತೇನೆ.ಎಂದು ಶುಭ ಹಾರೈಸಿದ್ದಾರೆ.