ಮಂಗಳೂರು: ಬೆಳ್ಳಾರೆಯಲ್ಲಿ ನಮ್ಮ ಕಾರ್ಯಕರ್ತನ ಹತ್ಯೆ ಖಂಡಿಸಲು ನನ್ನ ಬಳಿ ಶಬ್ದಗಳಿಲ್ಲ, ಸಿಎಂ ಹಾಗೂ ಗೃಹ ಸಚಿವರಿಗೆ ತನಿಖೆ ತೀವ್ರಗೊಳಿಸಲು ಮನವಿ ಮಾಡಿದ್ದೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವ ಸುನೀಲ್ ಕುಮಾರ್, ಮನೆ ಮಗನನ್ನು ಕಳೆದುಕೊಂಡಿದ್ದೇವೆ, ಇದರ ಹಿಂದಿರುವ ಶಕ್ತಿಗಳನ್ನ ಮಟ್ಟ ಹಾಕಲು ನಾವು ಸನ್ನದ್ದರಾಗಿದ್ದೇವೆ, ನಾವು ಸುಮ್ಮನಿರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಸರ್ಕಾರ ತಕ್ಕ ಉತ್ತರವನ್ನು ಕಾನೂನಿನ ಚೌಕಟ್ಟಿನಲ್ಲಿ ನೀಡಲಿದೆ ಎಂದು ಹೇಳಿರುವ ಸುನೀಲ್ ಕುಮಾರ್, ಮತಾಂಧ ಶಕ್ತಿಗಳನ್ನು ಹತ್ತಿಕ್ಕುವ ಕೆಲಸ ಮಾಡಿಯೇ ಮಾಡುತ್ತೇವೆ, ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಶಾಂತಿ ಕದಡುವ ಕೆಲಸ ಆಗಿರಲಿಲ್ಲ. ಆದರೆ ಈಗ ಕೇರಳದಿಂದಲೋ ಬಂದು ಶಾಂತಿ ಕದಡುವ ಕೆಲಸ ಆಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೇ ಜನಾಕ್ರೋಶವನ್ನು ಸರ್ಕಾರ ಗಮನದಲ್ಲಿಟ್ಟುಕೊಂಡಿದ್ದು, ಮುಂದಿನ ಎರಡು ಮೂರು ದಿನಗಳ ಕಾಲ ಸಿಎಂ ಹಾಗೂ ಗೃಹ ಸಚಿವರ ಜೊತೆ ಸಂಪರ್ಕದಲ್ಲಿದ್ದುಕೊಂಡು ಮತೀಯ ಶಕ್ತಿಯನ್ನು ಮಟ್ಟ ಹಾಕುತ್ತೇವೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.