ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ದಲಿತ ಸಂಘಟನೆಗಳಿಂದ ಬುಧವಾರ ಪ್ರತಿಭಟನೆ ನಡೆದಿದೆ.
ದಲಿತ ಸಮುದಾಯದವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದ್ದು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಮೂರು ತಿಂಗಳಿಗೊಮ್ಮೆ ಹಫ್ತಾ ವಸೂಲಿಗೆ ಬರುತ್ತಾರೆ ಎಂದು ಆರೋಪಿಸಿ ಬ್ರಹ್ಮಗಿರಿ ನಾಯರ್ ಕೆರೆ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದ ಎದುರು ಅಂಬೇಡ್ಕರ್ ಯುವ ಸೇನೆ ವತಿಯಿಂದ ಪ್ರತಿಭಟನೆ ನಡೆದಿದೆ.
ದಲಿತರಿಗೆ ಕಾಂಗ್ರೆಸ್ ಸರ್ಕಾರ ನಿರಂತರ ಅನ್ಯಾಯ ಮಾಡುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ದಲಿತ ಕುಂದು ಕೊರತೆ ಆಲಿಸುವ ಸಭೆ ನಡೆಯುತ್ತಿಲ್ಲ ಮತ್ತು ದಲಿತರ ಅನುದಾನ ದುರ್ಬಳಕೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ವಿರೋಧಿ ಅಧಿಕಾರಿಗಳ ವಿರುದ್ಧ ದೂರು ನೀಡಿದರೂ ಯಾವುದೇ ಕ್ರಮ ಆಗುತ್ತಿಲ್ಲ ಎಂದು ಅಸಮಾಧಾನ ತೋರ್ಪಡಿಸಿದ ಪ್ರತಿಭಟನಾಕಾರರು, ದಲಿತರ ನೂರಾರು ಸಮಸ್ಯೆಗೆ ಮನವಿ ಮಾಡಿದ್ದರೂ ಕಾಂಗ್ರೆಸ್ ಪಕ್ಷ ಸ್ಪಂದಿಸುತ್ತಿಲ್ಲ ಎಂದು ದೂರಿದ್ದಾರೆ.