
ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಮೆಂಟ್ ಮಾಡಿ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ಆರೋಪಿ ನಿಂಗರಾಜ್ಗೆ ಹೈಕೋರ್ಟ್ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿದ್ದಾರೆ.
ಹುಬ್ಬಳ್ಳಿಯ ಪೆಟ್ರೋಲ್ ಬಂಕ್ ಒಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ನಿಂಗರಾಜ್ ಗುಲಾಪ್ಪ ತಲ್ವಾರ್ ಎಂಬಾತನನ್ನು ಸೈಬರ್ ಕ್ರೈಂ ಪೊಲೀಸರು ಕಳೆದ ಜನವರಿಯಲ್ಲಿ ಬಂಧಿಸಿದ್ದರು. ಈ ಅಶ್ಲೀಲ ಕಮೆಂಟ್ ಆರೋಪದಿಂದಾಗಿ ಆತ ಸುಮಾರು 7 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸುವಂತಾಗಿತ್ತು.
ಪ್ರಕರಣದ ಹಿನ್ನೆಲೆ: ನಟ ಧನ್ವೀರ್ ಜೊತೆ ಸಿನಿಮಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿಜಯಲಕ್ಷ್ಮಿ ಅವರು ಆ ಕ್ಷಣಗಳ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆದರೆ, ಕೆಲ ಕಿಡಿಗೇಡಿಗಳು ನಕಲಿ ಖಾತೆಗಳನ್ನು ಸೃಷ್ಟಿಸಿ ವಿಜಯಲಕ್ಷ್ಮಿ ಅವರ ವೈಯಕ್ತಿಕ ಜೀವನವನ್ನೇ ಗುರಿಯಾಗಿಸಿಕೊಂಡು ತೀರಾ ಕೀಳು ಮಟ್ಟದ ಅಶ್ಲೀಲ ಪದಗಳಿಂದ ನಿಂದಿಸಿ ಟ್ರೋಲ್ ಮಾಡಿದ್ದರು. “ಗಂಡ ಜೈಲಿನಲ್ಲಿದ್ದರೂ ಈಕೆ ರ್ಯಾಪಿಡ್ ಡ್ರೈವರ್ ಕಾರಿನಲ್ಲಿ ಓಡಾಡುತ್ತಿದ್ದಾಳೆ” ಎಂಬಿತ್ಯಾದಿ ಸೈಬರ್ ಕಿರುಕುಳ ನೀಡಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಜಯಲಕ್ಷ್ಮಿ ಅವರು ದೂರು ನೀಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸೈಬರ್ ಕ್ರೈಂ ಪೊಲೀಸರು ನಕಲಿ ಖಾತೆಗಳ ಜಾಡು ಹಿಡಿದು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದರು.


