ಮಂಗಳೂರು: ಕೇರಳದ ಗಡಿಭಾಗಕ್ಕೆ ಹೊಂದಿಕೊಂಡಿರುವ ಮದ್ಯದಂಗಡಿಗಳಿಗೆ ಸೆ.21ರಿಂದ ಮುಂದಿನ ಆದೇಶದವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕೆಲವು ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಿ ವ್ಯವಹಾರ ನಡೆಸಲು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ, ಕೇರಳದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ 19 ಗ್ರಾಮಗಳ ಮದ್ಯದಂಗಡಿಗಳಿಗೆ ಮುಂದಿನ ಆದೇಶದ ವರೆಗೆ ಕೆಲವು ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದ್ದಾರೆ.
ಮದ್ಯ ಮಾರಾಟ ಮಳಿಗೆಯಲ್ಲಿನ ನೌಕರರು ಹಾಗೂ ಮದ್ಯ ಖರೀದಿಗೆ ಬರುವ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯ.
ಸನ್ನದು ಸ್ಥಳದಲ್ಲಿ ಸ್ಯಾನಿಟೈಸರ್ ಇಡಲು ವ್ಯವಸ್ಥೆ ಮಾಡುವುದರೊಂದಿಗೆ ಗ್ರಾಹಕರು ಕಡ್ಡಾಯವಾಗಿ ಸ್ಯಾನಿಟೈಸರ್ ಬಳಸುವಂತೆ ನೋಡಿಕೊಳ್ಳಬೇಕು ಹಾಗೂ ಈ ಬಗ್ಗೆ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕು.ಎಂದು ಜಿಲ್ಲಾ ದಂಡಾಧಿಕಾರಿಗಳು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.