ಬೆಂಗಳೂರು: ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ
ಇನ್ನು ಎರಡು ಮೂರು ದಿನ ಕಡ್ಡಾಯ ಭೇಟಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ನೀಡಿದ್ದಾರೆ.
ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಡಿಸಿಗಳು ವರದಿ ನೀಡಬೇಕು ಎಂದು ಬೆಂಗಳೂರಿನಲ್ಲಿ ಇಂದು ನಡೆದ ಮಳೆ ಹಾನಿ ಕುರಿತ ಡಿಸಿಗಳ ಜೊತೆಗಿನ ವೀಡಿಯೋ ಕಾನ್ಫರೆನ್ಸ್ ನಲ್ಲಿ ಸಿಎಂ ಸೂಚಿಸಿದ್ದಾರೆ.
ವಿವಿಧ ಇಲಾಖೆಗಳು ಸಮನ್ವಯ ಸಾಧಿಸಿ ಕೆಲಸ ಮಾಡುವಂತೆ ಹೇಳಿರುವ ಬಸವರಾಜ ಬೊಮ್ಮಾಯಿ, ಮುಂದಿನ 15 ದಿನಗಳ ಕಾಲ ಯಾವುದೇ ಅಧಿಕಾರಿಗಳು ರಜೆ ಮೇಲೆ ತೆರಳುವಂತಿಲ್ಲ ಎಂದು ಆದೇಶಿಸಿದ್ದಾರೆ.
ಅಲ್ಲದೇ, ಗ್ರಾಮ ಪಂಚಾಯತ್ ಪಿಡಿಓಗಳು ಸ್ಥಳದಲ್ಲಿಯೇ ಇದ್ದು ಮಳೆಹಾನಿ ಪರಿಶೀಲನೆ ಮಾಡಬೇಕು ಎಂದು ಹೇಳಿರುವ ಸಿಎಂ, ಮನೆ ಹಾನಿಗೆ ಎನ್ ಡಿ ಆರ್ ಎಫ್ ನಿಯಮ ಅನ್ವಯ ಕೂಡಲೇ ಪರಿಹಾರ ಬಿಡುಗಡೆ ಮಾಡಿ ಎಂದು ಸೂಚಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳು ವೀಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದರು.