ಚಿಕ್ಕಮಗಳೂರು: ಅಕ್ರಮವಾಗಿ ಗೋಹತ್ಯೆ ನಡೆಸುವ ನಿಟ್ಟಿನಲ್ಲಿ ನಿರ್ಮಾಣ ಮಾಡಿದ್ದ ಶೆಡ್ ಒಂದನ್ನು ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಕಾರ್ಯಾಚರಣೆಯ ಮೂಲಕ ಪತ್ತೆ ಮಾಡಿ ನೆಲಸಮಗೊಳಿಸಿದ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ತಮಿಳುಕಾಲೋನಿ ಬಳಿಯಲ್ಲಿ ಗೋಹತ್ಯೆ ನಡೆಸಲೆಂದೇ ಖಾಲಿ ಇದ್ದ ಜಾಗದಲ್ಲಿ ಅನಧಿಕೃತವಾಗಿ ಶೆಡ್ಡನ್ನು ನಿರ್ಮಿಸಿ ಗೋಹತ್ಯೆ ನಡೆಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಗುರುವಾರದಂದು ಸರಿಸುಮಾರು ಏಳು ಗಂಟೆಯ ಸಮಯದಲ್ಲಿ ಪೊಲೀಸ್ ಅಧಿಕಾರಿಗಳ ಭದ್ರತೆಯಲ್ಲಿ ನಗರಸಭೆ ಅಧ್ಯಕ್ಷರಾದ ವರಸಿದ್ಧಿ ವೇಣುಗೋಪಾಲ್ ಸೇರಿದಂತೆ ಪೌರಾಯುಕ್ತರು, ಇನ್ಸ್ಪೆಕ್ಟರ್, ಸೂಪರ್ವೈಸರ್, ದಾಳಿ ನಡೆಸಿ ಈ ಕಾರ್ಯಾಚರಣೆಯನ್ನು ನಡೆಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಅಂದಾಜು 400 ಕೆ.ಜಿ ಪ್ರಮಾಣದ ಗೋಮಾಂಸ ಪತ್ತೆಯಾಗಿದ್ದು, ಸ್ಥಳದಲ್ಲಿದ್ದ ಆರು ಜನ ಆರೋಪಿಗಳು ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನಾ ಸಂಬಂಧ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಪೋಲಿಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ. ಅಕ್ರಮವಾಗಿ ಲಭ್ಯವಾಗಿರುವ ಗೋಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇದಲ್ಲದೇ ಖಾಲಿ ಜಾಗದಲ್ಲಿ ನಿರ್ಮಿಸಲಾಗಿದ್ದ ಶೆಡ್ಡನ್ನು ಅಧಿಕಾರಿಗಳ ಸಮ್ಮುಖದಲ್ಲಿ ನೆಲಸಮ ಮಾಡಲಾಗಿದೆ.