ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾ ಅವರ ಬಗ್ಗೆ ಅವಹೇಳನಕಾರಿ ಟೀಕೆಗಳು ವ್ಯಕ್ತವಾಗುತ್ತಿದ್ದು, ಈ ಬಗ್ಗೆ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ ಎಂದು ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ.
ಮಹಿಳೆಯರ ಬಗ್ಗೆ ಕೀಳು ಮಟ್ಟದ ಪೋಸ್ಟ್ಗಳನ್ನು ಜಾಲತಾಣದಲ್ಲಿ ಯಾರೇ ಆಗಲಿ ಪೋಸ್ಟ್ ಮಾಡಿದರು ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರಿಗೆ ಮಾನಸಿಕವಾಗಿ ನೋಯಿಸುವ ಇಂಥವರಿಗೆ ಕಾನೂನಿನಡಿ 3 ರಿಂದ 7 ವರ್ಷದ ಜೈಲು ಶಿಕ್ಷೆಯಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ರಮ್ಯಾ ಅವರ ಬಗ್ಗೆ ದರ್ಶನ್ ಅಭಿಮಾನಿಗಳು ಕೆಟ್ಟ ಪದಗಳಿಂದ ಟೀಕೆಗಳನ್ನು ಮಾಡುತ್ತಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೋಮುನಾಯಕ ಎಂಬುವರು ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ನಾವು ರಮ್ಯಾ ಅವರು ಸೆಲಿಬ್ರಿಟಿ ಎಂಬ ಕಾರಣಕ್ಕೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿಲ್ಲ. ಯಾವುದೇ ಹೆಣ್ಣು ಮಗಳಿಗೆ ಮಾನ ಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ಬಂದರೆ ನಾವು ಪ್ರಕರಣ ದಾಖಲಿಸುತ್ತೇವೆ. ಈಗ ರಮ್ಯಾಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯಬಾರದೆಂದು ಆಯೋಗ ಬಯಸುತ್ತದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ದೂರಿಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು, ಸೆನ್ ಪೊಲೀಸ್ ಠಾಣೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.


