ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ರಾಜ್ಯದ ದ. ಕ., ಉಡುಪಿ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯ ವಿವಿಧ ತಾಲೂಕುಗಳ 507 ಶಾಲೆಗಳಿಗೆ ಒಟ್ಟು 2.74 ಕೋಟಿ ರೂ. ಮೊತ್ತದ 4,044 ಜತೆ ಡೆಸ್ಕ್-ಬೆಂಚು ವಿತರಣಾ ಸಮಾರಂಭಕ್ಕೆ ವೀರೇಂದ್ರ ಹೆಗ್ಗಡೆಯವರು ನಂ. 13 ರಂದು ಚಾಲನೆ ನೀಡಿದರು.
ನಂತರದಲ್ಲಿ ಮಾತನಾಡಿದ ಅವರು, “ರಾಜ್ಯದ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದ್ದು, ಈ ನಿಟ್ಡಿನಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಸರಕಾರ ಭರ್ತಿ ಮಾಡಬೇಕು. ಹೀಗೆ ಮಾಡಿದರೆ ಮಾತ್ರ ಹೆಚ್ಚುವರಿ ಸರಕಾರಿ ಶಾಲೆಗಳು ಉಳಿಯಬಹುದು,” ಎಂದರು.
ಈ ಸಂದರ್ಭದಲ್ಲಿ ಹೇಮಾವತಿ ವೀ. ಹೆಗ್ಗಡೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ದ.ಕ.ಜಿಲ್ಲಾ ಉಪ ನಿರ್ದೇಶಕ ವೆಂಕಟೇಶ್ ಸುಬ್ರಾಯ ಪಟಗಾರ್, ದ.ಕ. ಜಿ.ಪಂ. ಸಿಇಒ ಆನಂದ ಕೆ., ತಾ.ಪಂ. ಇಒ ಭವಾನಿಶಂಕರ್, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ತುಳುಪುಳೆ, ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷೆ ವಿಮಲಾ ಉಪಸ್ಥಿತರಿದ್ದರು. ಧ.ಗ್ರಾ.ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಪ್ರಾಸ್ತಾವಿಸಿ, ಸ್ವಾಗತಿಸಿದರು. ನಿರ್ದೇಶಕ ಶಿವಾನಂದ ಆಚಾರ್ಯ ನಿರೂಪಿಸಿದರು.