ಮಂಗಳೂರು: ಸುಳ್ಳನ್ನು ಸತ್ಯ ಮಾಡುವುದೇ ಆರ್ ಎಸ್ಎಸ್ ನ ತರಬೇತಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ದಿನೇಶ್ ಗುಂಡೂರಾವ್, ಯಾವ ರೀತಿ ಪ್ರಚೋದನೆ ಮಾಡಬೇಕು, ಗಲಾಟೆ ಎಬ್ಬಿಸಬೇಕು, ದಂಗೆ ಮಾಡಬೇಕೆಂಬ ತರಬೇತಿ ಕೊಡುತ್ತಾರೆ ಎಂದು ಹೇಳಿದ್ದಾರೆ.
ಬಿಜೆಪಿ ಮತ್ತು ಸಂಘ ಪರಿವಾರದಲ್ಲಿ ಇದಕ್ಕೆಂದೇ ತರಬೇತಿ ಇರುತ್ತದೆ ಎಂದಿರುವ ದಿನೇಶ್ ಗುಂಡೂರಾವ್, ರಾಜ್ಯಪಾಲರ ನಡೆಯ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಾಗಿದೆ, ಯಾವ ರೀತಿ ಪಕ್ಷಪಾತ ಮಾಡಿದ್ದಾರೆಂದು ಗೊತ್ತಾಗಿದೆ ಎಂದು ತಿಳಿಸಿದ್ದಾರೆ.
ಬಿಜೆಪಿಯವರು ಸುಮ್ಮನೆ ಬೊಬ್ಬೆ ಹಾಕಿ ಸುಳ್ಳನ್ನು ಸತ್ಯ ಮಾಡಲು ದೇಶದಾದ್ಯಂತ ಪ್ರಯತ್ನ ಮಾಡುತ್ತಿದ್ದಾರೆ, ನಮ್ಮ ಮುಖ್ಯಮಂತ್ರಿಗಳು ಯಾವುದೇ ಅಧಿಕಾರ ದುರುಪಯೋಗ ಮಾಡಿಲ್ಲ ಭ್ರಷ್ಟಾಚಾರ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವರು ಸಮರ್ಥನೆ ಮಾಡಿಕೊಂಡಿದ್ದಾರೆ.
ಅಲ್ಲದೇ, ರಾಜ್ಯಪಾಲರು ಸರ್ಕಾರದ ಸಾಂವಿಧಾನಿಕ ಮುಖ್ಯಸ್ಥರಾಗಿ ಸರ್ಕಾರದ ವಿರುದ್ಧವೇ ಷಡ್ಯಂತ್ರದಲ್ಲಿ ಭಾಗಿಯಾದರೆ ಅದನ್ನು ಏನೆಂದು ಕರೆಯುವುದು ಎಂದೂ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.