ಮಡಿಕೇರಿ: ಕೊರೋನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕ ಪಡಬೇಕಿಲ್ಲ, ಯಾವ ಕ್ರಮ ತೆಗೆದುಕೊಳ್ಳಬೇಕು ಎಂದು ಸಭೆ ಮಾಡಿ ಚರ್ಚಿಸಿದ್ದೇವೆ ಎಂದು ಆರೋಗ್ಯ ಸಚಿವ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ಕೇರಳ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಹಾಗೂ ತಜ್ಞರ ಜೊತೆ ಕೂಡ ಚರ್ಚೆ ಮಾಡಲಾಗಿದ್ದು, 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಸಮಸ್ಯೆ ಇರುವವರು ಮತ್ತು ಕೊರೋನಾ ಲಕ್ಷಣ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
ರಾಜ್ಯದ ಎಲ್ಲಾ ಆಸ್ಪತ್ರೆಗಳನ್ನು ಸನ್ನದ್ಧ ಸ್ಥಿತಿಯಲ್ಲಿರಲು ಸೂಚಿಸಲಾಗಿದ್ದು, ಹೆಚ್ಚು ಪಾಸಿಟಿವ್ ಬಂದರೆ ಮಾತ್ರ ನಿಷೇಧ, ಅದು ಇದು ಮಾಡಬಹುದು, ಆದರೆ ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.