ಬೆಂಗಳೂರು: ಎಬೋಲಾ ವೈರಸ್ ಕುರಿತಾಗಿ ಸಾರ್ವಜನಿಕರು ಆತಂಕಕ್ಕೆ ಒಳಗಾಗುವುದು ಬೇಡ, ಬದಲಾಗಿ ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.
ಆರೋಗ್ಯ ಇಲಾಖೆ ಅಧಿಕಾರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ದೇಶದಲ್ಲಿ ಇನ್ನೂ ಎಬೋಲಾ ಪ್ರಕರಣ ಪತ್ತೆಯಾಗಿಲ್ಲ, ಅಲ್ಲದೇ ಅಕ್ಕ ಪಕ್ಕದ ದೇಶಗಳಲ್ಲಿಯೂ ಪ್ರಕರಣ ದಾಖಲಾಗಿಲ್ಲ. ಆದರೂ ಕೂಡ ನಾವು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ.
ಆಫ್ರಿಕನ್ ದೇಶಗಳಾದ ಉಗಾಂಡಾ, ಕಾಂಗೋ ಮುಂತಾದ ದೇಶಗಳಿಂದ ಬಂದವರನ್ನು 21 ದಿನಗಳ ಕಾಲ ನಿಗಾದಲ್ಲಿ ಇರಿಸಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.
ರೋಗ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಮಾಹಿತಿ ನೀಡಲು ಸೂಚಿಸಲಾಗಿದ್ದು, ರಾಜ್ಯ ಸರ್ಕಾರ ಎಲ್ಲ ರೀತಿಯ ಮುಂಜಾಗ್ರತೆ ವಹಿಸಿದೆಯಲ್ಲದೇ ಕೇಂದ್ರ ಸರ್ಕಾರವೂ ಮಾರ್ಗಸೂಚಿ ಬಿಡುಗಡೆ ಮಾಡಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.


