ಕನ್ನಡ ಸಮನ್ವಯ ಕವಿ, ಹಿರಿಯ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ 93 ವರ್ಷ.
ಕಳೆದ ಕೆಲ ದಿನಗಳಿಂದ ಕಣವಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಹಾಗೇ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಅವರನ್ನು ಜನವರಿ 14 ರಂದು ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಾಡೋಜ ಡಾ.ಚೆನ್ನವೀರ ಕಣವಿ ಅವರು ಜೂನ್ 28, 1928 ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಜನಿಸಿದರು. ಅವರು ತಮ್ಮ ಬಿಎ ಮತ್ತು ಎಂಎ ಪದವಿಗಳನ್ನು ಕರ್ನಾಟಕ ವಿಶ್ವವಿದ್ಯಾಲಯದಿಂದ ಪಡೆದರು. ಕರ್ನಾಟಕ ವಿಶ್ವವಿದ್ಯಾಲಯದ ಪ್ರಕಟಣೆ ಮತ್ತು ವಿಸ್ತರಣಾ ಸೇವಾ ವಿಭಾಗದ ಕಾರ್ಯದರ್ಶಿಯಾಗಿ ಹಾಗೂ ಪ್ರಸಾರಾಂಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಸಮನ್ವಯತೆಯಲ್ಲಿ ಮೇಲುಗೈ ಸಾಧಿಸಿದ ಅವರು ಭಾವನೆಗಳ ಕವಿ ಎಂದು ಹೆಸರಾಗಿದ್ದರು.
ಡಾ ಕಣವಿಯವರ ಮೊದಲ ಕವನ ಸಂಕಲನ ‘ಕಾವ್ಯಾಕ್ಷಿ’ 1949 ರಲ್ಲಿ ಬಿಡುಗಡೆಯಾಯಿತು. ನಂತರ ಅವರು ಭಾವಜೀವಿ, ಆಕಾಶಬುಟ್ಟಿ, ಮಣ್ಣಿನ ಮೆರೆವಣಿಗೆ, ನೆಲಮುಗಿಲು, ಜೀವಧ್ವನಿ ಮತ್ತು ಇತರ ಕವನಗಳ ಸಂಕಲನಗಳನ್ನು ಹೊರತಂದರು. ಹಾಸನದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರು ಕೇಂದ್ರ ಸಜಿಯೋತ್ಯ ಅಕಾಡೆಮಿ ಪ್ರಶಸ್ತಿ, ಅನಕೃ ಪ್ರತಿಷ್ಠಾನದ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಮುಂತಾದವುಗಳನ್ನು ಮುಡಿಗೇರಿಸಿಕೊಂಡಿದ್ದರು. ಹಂಪಿ ವಿಶ್ವವಿದ್ಯಾನಿಲಯವು ನಾಡೋಜ ಬಿರುದು ನೀಡಿ ಗೌರವಿಸಿದೆ. ಕರ್ನಾಟಕ ವಿಶ್ವವಿದ್ಯಾಲಯ ಇವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.