ಪುತ್ತೂರು: ವಿಧಾನಸಭೆ ಕ್ಷೇತ್ರದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಕಲ್ಪಿಸುವ ನಿಟ್ಟಿನಲ್ಲಿ 325 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯು ಅನುಷ್ಠಾನವಾಗಲಿದ್ದು, ಪ್ರಸ್ತುತ ಟೆಂಡರ್ ಹಂತದಲ್ಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.
ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸಹಯೋಗದಲ್ಲಿ ಆರ್ಯಾಪು ಗ್ರಾ.ಪಂ.ನಿಂದ ಕಚೇರಿ ಆವರಣದಲ್ಲಿ ನಿರ್ಮಾಣಗೊಂಡ ನೇತಾಜಿ ಸುಭಾಷ್ಚಂದ್ರ ಭೋಸ್ ಸಭಾಂಗಣ ಉದ್ಘಾಟನೆ ಹಾಗೂ ನರೇಗಾ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವಿವಿಧ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ನೇತ್ರಾವತಿ ನದಿಯಿಂದ ನೀರನ್ನು ಸಂಗ್ರಹಿಸಿ ಓವರ್ಹೆಡ್ ಟ್ಯಾಂಕ್ ಗಳ ಮೂಲಕ ಮನೆಗಳಿಗೆ ಸರಬರಾಜು ಮಾಡಲಾಗುವುದು ಎಂದರು.
ಜಲ ಜೀವನ್ ಮಿಷನ್ ಮೂಲಕ 3.5 ಕೋ.ರೂ., ರಸ್ತೆ, ಕುಡಿಯುವ ನೀರು ಮೊದಲಾದ ಮೂಲ ಸೌಲಭ್ಯ ಕಲ್ಪಿಸಲು ಆರ್ಯಾಪು ಗ್ರಾ.ಪಂ.ಗೆ 11.55 ಕೋ. ರೂ. ಅನುದಾನ ನೀಡಲಾಗಿದೆ. ಗ್ರಾಮೀಣ ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಸಣ್ಣ ಕೈಗಾರಿಕೆ ಉತ್ತೇಜನ ನೀಡಲು ಆರ್ಯಾಪು ಗ್ರಾ.ಪಂ.ನಲ್ಲಿ ಜಾಗ ಗುರುತಿಸಲಾಗುವುದು ಎಂದು ಹೇಳಿದರು.
ರಾಜೀವ ಗಾಂಧಿ ಸೇವಾ ಕೇಂದ್ರವನ್ನು ಉದ್ಘಾಟಿಸಿದ ವಿ.ಪ. ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ಗ್ರಾ.ಪಂ.ನಲ್ಲಿ ಕೇಂದ್ರ, ರಾಜ್ಯ ಸರಕಾರಗಳು ಆಡಳಿತ ನಡೆಸುವುದಲ್ಲ. ಸ್ಥಳೀಯವಾಗಿ ಜನರಿಂದ ಆಯ್ಕೆಯಾದ ಪ್ರತಿನಿಧಿಗಳ ಆಡಳಿತ ನಡೆಸುತ್ತಾರೆ ಎಂದರು. ಆರ್ಯಾಪು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಕೆ. ಅಧ್ಯಕ್ಷತೆ ವಹಿಸಿದ್ದರು.