ಉಡುಪಿ; ಚಾಲಕನ ನಿಯಂತ್ರಣ ತಪ್ಪಿ ಫಾರ್ಚೂನರ್ ಕಾರು ಚರಂಡಿಗೆ ಪಲ್ಟಿಯಾದ ಪರಿಣಾಮ ಆರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ–66ರ ಕುಂದಾಪುರ ತಾಲೂಕಿನ ಕನ್ನುಕೆರೆ, ನವಶಕ್ತಿ ಕಲ್ಯಾಣ ಮಂಟಪದ ಎದುರು ನಡೆದಿದೆ..
ಗಾಯಗೊಂಡವರು ಮಹಾರಾಷ್ಟ್ರದ ಪುಣೆಯ ಲಾ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎನ್ನಲಾಗಿದೆ.
ಒಟ್ಟು 12 ಮಂದಿ ವಿದ್ಯಾರ್ಥಿಗಳು ಜ.31ರಂದು ಎರಡು ಕಾರುಗಳಲ್ಲಿ ದೇಶ ಸುತ್ತುವ ಪ್ರವಾಸಕ್ಕೆ ಹೊರಟಿದ್ದರು. ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪುಣೆಗೆ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಮಧ್ಯಾಹ್ನದ ವೇಳೆಗೆ ತೆಕ್ಕಟ್ಟೆ ಸಮೀಪದ ಕನ್ನುಕೆರೆ ಪ್ರದೇಶದಲ್ಲಿ ಕಾರು ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಹಾರಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಕಾರು ಪಲ್ಟಿ ಹೊಡೆದು ಬಿದ್ದಿದೆ. ಅಪಘಾತ ಸಂಭವಿಸಿದ ವೇಳೆಗೆ ಕಾರಿನಲ್ಲಿ ಚಾಲಕ ಸೇರಿದಂತೆ ಆರು ಮಂದಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಅಪಘಾತದ ಪರಿಣಾಮ ಎಲ್ಲರೂ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಘಟನೆ ನಡೆದ ಕೂಡಲೇ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಿದ್ದಾರೆ.ಅಪಘಾತಕ್ಕೆ ಚಾಲಕನ ಅತೀವೇಗ ಮತ್ತು ಅಜಾಗರೂಕತೆ ಕಾರಣವಾಗಿದ್ದು, ವಿದ್ಯಾರ್ಥಿಗಳು ಮದ್ಯಪಾನ ಮತ್ತದಲ್ಲಿದ್ದರೆಂಬ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕೋಟ ಪೊಲೀಸ್ ಠಾಣಾಧಿಕಾರಿ ಪ್ರವೀಣ್ ಕುಮಾರ್ ಆರ್. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


