ತುಮಕೂರು; ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋಣ್ ಪ್ರತಾಪ್ ಗೆ ಜಾಮೀನು ಮಂಜೂರಾಗಿದೆ.
ತುಮಕೂರು ಜಿಲ್ಲೆಯ ಮಧುಗಿರಿ 4ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸ್ಫೋಟ ಪ್ರಕರಣ ಸಂಬಂಧ ಪ್ರತಾಪ್ ವಿರುದ್ಧ ಮಿಡಿಗೇಶಿ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದರು. ಬಳಿಕ ಕೋರ್ಟ್ ಪ್ರತಾಪ್ ಅವರನ್ನು ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ಜಾಮೀನು ಮಂಜೂರು ಮಾಡಿದೆ. ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿಹೊಂಡದಲ್ಲಿ ಪ್ರತಾಪ್ ಸ್ಫೋಟಿಸಿ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಕ್ಕೆ ಟೀಕೆಗಳು ವ್ಯಕ್ತವಾಗಿದ್ದವು. ಬಳಿಕ ಅವರ ಬಂಧನವಾಗಿತ್ತು.
ಇನ್ನು ವಿಚಾರಣೆ ವೇಳೆ ಡ್ರೋನ್ ಪ್ರತಾಪ್ ಹಲವು ಸಂಗತಿಯಗಳನ್ನು ಬಾಯಿಬಿಟ್ಟಿದ್ದಾರೆ. ಇದಕ್ಕೂ ಮುನ್ನ ಎರಡು ಬಾರಿ ಇದೇ ರೀತಿಯ ಸ್ಫೋಟಿಸಿದ್ದೆ. ಸ್ಫೋಟದ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದೆ ಎಂದು ಡ್ರೋನ್ ಪ್ರತಾಪ್ ಪೊಲೀಸರ ಮುಂದೆ ಹೇಳಿದ್ದಾರೆ. ಯೂಟ್ಯೂಬ್ನಿಂದ 100 ಡಾಲರ್ ಬಂದಿತ್ತು. ಹೀಗಾಗಿ, ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಸೋಡಿಯಂ ಬಳಸಿ ಸ್ಫೋಟಿಸಿದೆ. ಸ್ಫೋಟದ ವಿಡಿಯೋವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದೆ. ಇದರಿಂದ ಬರುವ ಹಣವನ್ನು ಸಮಾಜ ಕಾರ್ಯಕ್ಕೆ ಉಪಯೋಗಿಸಲು ನಿರ್ಧರಿಸಿದ್ದೇನೆ ಎಂದು ಬಾಯಿ ಬಿಟ್ಟಿದ್ದಾರೆ. ಅಲ್ಲದೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸ್ಫೋಟವಾಗುತ್ತದೆ ಎಂದು ನನಗೆ ಅರಿವಿರಲಿಲ್ಲ. ಸ್ಫೋಟವಾದ ಬಳಿಕ ನನಗೆ ಅರಿವು ಆಗಿದೆ ಎಂದು ಪೊಲೀಸರ ಮುಂದೆ ಹೇಳಿದ್ದರು.