ಬೆಂಗಳೂರು: ಸೆಪ್ಟೆಂಬರ್ 6 ರಂದು ಎತ್ತಿನ ಹೊಳೆ ನೀರಾವರಿ ಯೋಜನೆಗೆ ಚಾಲನೆ ದೊರೆಯಲಿದೆ.ಗೌರಿ ಹಬ್ಬದ ದಿನದಂದು ಎತ್ತಿನ ಹೊಳೆ ನೀರಾವರಿ ಯೋಜನೆಗೆ ಚಾಲನೆ ನೀಡುವುದಾಗಿ ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಇಲಾಖೆ ಸಚಿವ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಇಂದು ಹೇಳಿಕೆ ನೀಡಿದ್ದಾರೆ.
ಸೆಪ್ಟೆಂಬರ್ 6 ರಂದು ಮಧ್ಯಾಹ್ನ 12 ಗಂಟೆ 05 ನಿಮಿಷಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ.ಏತ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಸವನಹಳ್ಳಿ ಗ್ರಾಮದ ಕುಂಬರಡಿ ಕಾಫಿ ಎಸ್ಟೇಟ್ ಬಳಿ ಯೋಜನೆಯ ಪರೀಕ್ಷಾರ್ಥ ನೀರು ಹರಿಸುವ ಕಾರ್ಯಚರಣೆಯನ್ನು ಕಳೆದ ವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಕಳೆದ ಬುಧವಾರ ಪರಿಶೀಲನೆ ನಡೆಸಿದ್ದರು.
24.01 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ಕುಡಿಯಲು ನೀರು ಪೂರೈಕೆಯಾಗಲಿದೆ.
ಅಲ್ಲದೇ, ಬರಪೀಡಿತ 29 ತಾಲೂಕಿನ 38 ಪಟ್ಟಣ ಹಾಗೂ 6,657 ಗ್ರಾಮಗಳ ಸುಮಾರು 75.59 ಲಕ್ಷ ಜನರು ಮತ್ತು ಜಾನುವಾರುಗಳಿಗೆ 14.056 ಟಿಎಂಸಿ ನೀರನ್ನು ಒದಗಿಸಲಾಗುತ್ತದೆ.
23,251 ಕೋಟಿ ರೂಪಾಯಿ ಮೊತ್ತದ ಎತ್ತಿನಹೊಳೆ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ತುಮಕೂರು ಜಿಲ್ಲೆಗಳ ವ್ಯಾಪ್ತಿಯ 527 ಕೆರೆಗಳಿಗೆ 9.953 ಟಿಎಂಸಿ ನೀರನ್ನು ಹರಿಸುವುದು ಮುಖ್ಯ ಉದ್ದೇಶವಾಗಿದೆ.