ಉಡುಪಿ: ವೀರಪ್ಪ ಮೊಯ್ಲಿ ಮುಖ್ಯಮಂತ್ರಿ ಆಗಿದ್ದ ವೇಳೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸಲು ಅವರಿಂದ ಸಾಧ್ಯವಾಗಿಲ್ಲ. ಅವತ್ತು ರಾಷ್ಟ್ರಧ್ವಜದ ಬಗ್ಗೆ ಗೌರವ ಇಟ್ಟುಕೊಳ್ಳದ ವೀರಪ್ಪ ಮೊಯ್ಲಿ ಇಂದು ಕಾಲ್ನಡಿಗೆ ಜಾಥಾ ಮಾಡುವ ಮೂಲಕ ಬಿಜೆಪಿಯನ್ನು ಟೀಕಿಸುತ್ತಿದ್ದಾರೆ ಎಂದು ಸಚಿವ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ರು.
ಉಡುಪಿಯಲ್ಲಿ ಅಮೃತ ಮಹೋತ್ಸವ ಆಚರಣೆ ಕುರಿತು ಬಿಜೆಪಿ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಕಳದ ಅಭಿವೃದ್ದಿ ಓಟ ನೋಡಲಾರದೇ, ಕಾರ್ಕಳ ಉತ್ಸವಕ್ಕೆ, ಎಣ್ಣೆಹೊಳೆ ಯೋಜನೆಗೆ ಹೀಗೆ ಪ್ರತಿಯೊಂದು ಕಾರ್ಯಕ್ಕೂ ಕಾಂಗ್ರೆಸ್ನಿಂದ ವಿರೋಧ, ಟೀಕೆ ವ್ಯಕ್ತವಾಗುತ್ತಿದೆ. ಕಾರ್ಕಳ ಅಭಿವೃದ್ಧಿಯಾಗಬೇಕು ಎಂಬ ಕಲ್ಪನೆ ಇಟ್ಟುಕೊಂಡು ಕಳೆದೊಂದು ವರ್ಷದಿಂದ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿಲ್ಲ. ಯಾವ ವೇದಿಕೆಯನ್ನೂ ರಾಜಕಾರಣಕ್ಕಾಗಿ ಅಥವಾ ಟೀಕೆಗಾಗಿ ಬಳಸಿಕೊಂಡಿಲ್ಲ. ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನೂ ಕಾಂಗ್ರೆಸ್ ಟೀಕೆಗೆ ಬಳಸುತ್ತಿರುವುದು ನೋಡಿ ಸುಮ್ಮನಿರೋಕೆ ಸಾಧ್ಯವಾಗಿಲ್ಲ. 100 ಸುಳ್ಳು ಹೇಳಿ ಸತ್ಯ ಮಾಡುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ. 40 ವರ್ಷ ಕಾರ್ಕಳದಲ್ಲಿ ಆಳ್ವಿಕೆ ನಡೆಸಿದ ಕಾಂಗ್ರೆಸ್ ಕಾರ್ಕಳದ ಬಗ್ಗೆ ಯೋಚನೆಯೇ ಮಾಡಿಲ್ಲ ಎಂದು ಸುನಿಲ್ ಕುಮಾರ್ ಹೇಳಿದರು.