ಮಂಗಳೂರು: ಕೊರೊನಾ ನಿಯಮ ಉಲ್ಲಂಘನೆ ಮಾಡಿ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳನ್ನು ಹಾಸ್ಟೆಲ್ ನಲ್ಲಿ ಇರಿಸಿಕೊಂಡಿದ್ದ ನಗರದ ವಲಚ್ಚಿಲ್ ಎಕ್ಸ್ಪರ್ಟ್ ಕಾಲೇಜಿನ ಆಡಳಿತ ಮಂಡಳಿಯ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಕ್ಸ್ಪರ್ಟ್ ಕಾಲೇಜಿನ ಆಡಳಿತ ಸಂಸ್ಥೆಯ ದ್ವಿತೀಯ ಪಿಯುಸಿಯ 30 ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆಯಲ್ಲಿ ಇರಿಸಿಕೊಂಡಿದ್ದು, ಇವರ ಹೆತ್ತವರು ಹಾಗೂ ಪೋಷಕರು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವ ಸಲುವಾಗಿ ದೂರದ ಊರಿನಿಂದ ಬಂದಿದ್ದರು. ಸಂಸ್ಥೆಯವರು ರಾಜ್ಯಾದ್ಯಂತ ಕೊರೊನಾ ಕರ್ಫ್ಯೂ ಘೋಷಣೆ ಮಾಡಿದ್ದರೂ ವಿದ್ಯಾರ್ಥಿಗಳನ್ನು ಪೋಷಕರೊಂದಿಗೆ ಕಳುಹಿಸದೆ ಶೈಕ್ಷಣಿಕ ಚಟುವಟಿಕೆ ನಡೆಸಿ ಕೋವಿಡ್ ಸಾಂಕ್ರಾಮಿಕ ರೋಗ ಹರಡಲು ಕಾರಣರಾಗಿದ್ದಾರೆ ಎನ್ನಲಾಗುತ್ತಿದೆ.
ಹೀಗಾಗಿ ಎಕ್ಸ್ಪರ್ಟ್ ಕಾಲೇಜು ಆಡಳಿತ ಮಂಡಳಿಯು ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿದೆ ಎಂದು ವಿದ್ಯಾ ಸಂಸ್ಥೆಯ ಮುಖ್ಯಸ್ಥ ನರೇಂದ್ರ ನಾಯಕ್ ಮತ್ತು ಆಡಳಿತ ಮಂಡಳಿಯ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕಲಂ 5(1), 5(4) ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.