ಪುತ್ತೂರು : ಪುತ್ತಿಲ ಪರಿವಾರದ ಮತ್ತು ಹಿಂದೂ ಜಾಗರಣ ವೇದಿಕೆ ಮುಖಂಡರ ನಡುವೆ ಗಲಾಟೆ ನಡೆದ ಪ್ರಕರಣ ಪುತ್ತೂರಿನ ಮುಕ್ರಂಪಾಡಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 7 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಾಕಿರುವ ಪೋಸ್ಟ್ ವಿಚಾರ ಗಲಾಟೆಗೆ ಕಾರಣ ಎನ್ನಲಾಗಿದೆ.
ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರ ಕಚೇರಿಗೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದಾರೆ. ಅರುಣ್ ಪುತ್ತಿಲ ಬೆಂಬಲಿಗರಾದ ಮನೀಶ್ ಕುಲಾಲ್ ಬನ್ನೂರು ಅವರ ಮೇಲೆ ದಾಳಿ ಮಾಡಲು ದಿನೇಶ್ ಪಂಜಿಗ ಎಂಬಾತ ನಾಲ್ವರು ಯುವಕರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿದ್ದ ಎನ್ನಲಾಗಿದೆ.
ಈ ವೇಳೆ ಪುತ್ತಿಲ ಪರಿವಾರ, ಮನೀಶ್ ಕುಲಾಲ್ ಕಚೇರಿಯಲ್ಲಿ ಇರಲಿಲ್ಲ. ಮಾಹಿತಿ ತಿಳಿದ ಮನೀಶ್ ಕುಲಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪುತ್ತೂರು ಶಾಂತಿಗೋಡು ಗ್ರಾಮದ ದಿನೇಶ ಪಂಜಿಗ (38) , ನರಿಮೊಗರು ಗ್ರಾಮದ ಭವಿತ್ (19) , ಪುತ್ತೂರು ಬೊಳ್ವಾರು ನಿವಾಸಿ ಮನ್ವಿತ್ (19), ಆರ್ಯಾಪು ಗ್ರಾಮದ ಜಯಪ್ರಕಾಶ (18),. ಚಿಕ್ಕಮುಡ್ನೂರು ಗ್ರಾಮದ ಚರಣ್ (23), ಪುತ್ತೂರು ಬನ್ನೂರು ಗ್ರಾಮದ ಮನೀಶ (23), ಪುತ್ತೂರು ಕಸಬಾ ಗ್ರಾಮದ ವಿನೀತ್ (19) ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಘಟನೆಯ ಬಳಿಕ ಪುತ್ತೂರು ಠಾಣೆಯ ಮುಂದೆ ಹಿಂದೂ ಜಾಗರಣ ವೇದಿಕೆ ಹಾಗೂ ಪುತ್ತಿಲ ಪರಿವಾರದ ಕಾರ್ಯಕರ್ತರು ಜಮಾಯಿಸಿದ್ದಾರೆ. ಪೊಲೀಸ್ ಠಾಣೆಗೆ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಆಗಮಿಸಿ ಮಾತುಕತೆ ನಡೆಸಿದ್ದಾರೆ. ಪರಿಸ್ಥಿತಿ ಸ್ವಲ್ಪ ಬಿಗುವಿನಿಂದ ಕೂಡಿದೆ ಎಂದು ಹೇಳಲಾಗಿದೆ. ವಾಟ್ಸಾಪ್ ಗ್ರೂಪ್ನಲ್ಲಿ ನಡೆದ ಚರ್ಚೆಯೇ ಘಟನೆಗೆ ಕಾರಣ ಎನ್ನಲಾಗಿದ್ದು, ಅಕ್ಷಯ್ ಕಲ್ಲೇಗ ಘಟನೆಯ ಬೆನ್ನಲ್ಲೇ ಮತ್ತೆ ಯುವಕರು ತಲವಾರು ಹಿಡಿದ್ದದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.