ಬಂಟ್ವಾಳ: ಈದ್ ಮಿಲಾದ್ ಮೆರವಣಿಗೆ ವೇಳೆ ಬರುವಂತೆ ಹಿಂದೂ ಸಂಘಟನೆಗಳ ಮುಖಂಡರಿಗೆ ಆಡಿಯೋ ಸವಾಲು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಹರಿಬಿಟ್ಟಿದ್ದ ಬಂಟ್ವಾಳ ಪುರಸಭೆ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಹಾಗೂ ಸದಸ್ಯನ ಸಹೋದರ ಹಸೈನಾರ್ ಮೇಲೆ ಪ್ರಕರಣ ದಾಖಲಾಗಿದೆ.
ಆಡಿಯೋ ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮತ್ತು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಆಗ್ರಹಿಸಿದ್ದರು.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದ್ದ ಗಣೇಶ ವಿಸರ್ಜನೆ ಗಲಾಟೆ ಹಿನ್ನೆಲೆಯಲ್ಲಿ ಈದ್ ಮಿಲಾದ್ ಮೆರವಣಿಗೆ ತಡೆಯುವ ಎಚ್ಚರಿಕೆ ನೀಡಿದ್ದ ಶರಣ್ ಪಂಪ್ ವೆಲ್ ಗೆ ಈದ್ ಮಿಲಾದ್ ಮೆರವಣಿಗೆಗೆ ಬರುವಂತೆ ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಹರಿಬಿಟ್ಟಿದ್ದರು.
ಆಡಿಯೋ ಸವಾಲು ಸ್ವೀಕರಿಸಿದ್ದ ಬಜರಂಗದಳ ಇಂದು ಬಿ.ಸಿ. ರೋಡ್ ಚಲೋಗೆ ಕರೆ ನೀಡಿತ್ತು. ಬಿ.ಸಿ. ರೋಡ್ ನಿಂದ ಕೈಕಂಬ ಮಸೀದಿಯವರೆಗೆ ಇಂದು ಈದ್ ಮಿಲಾದ್ ಮೆರವಣಿಗೆ ನಡೆಯಲಿದೆ.


