ಮಂಗಳೂರು: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆಲವೊಂದು ಮುನ್ನೆಚ್ಚರಿಕೆ ಕ್ರಮದ ಮಾರ್ಗಸೂಚಿ ಪ್ರಕಟಿಸಿದ್ದಾರೆ.
ಹೊಸ ವರ್ಷದ ಸಂದರ್ಭದಲ್ಲಿ ಎಚ್ಚರ ವಹಿಸುವಂತೆ ಸೂಚಿಸಿದ ರವಿಕುಮಾರ್ ಎಂ.ಆರ್. ಕೆಲವೊಂದು ಶಿಷ್ಟಾಚಾರ ಕ್ರಮಗಳನ್ನು ಪಾಲಿಸಲು ಜಿಲ್ಲಾಧಿಕಾರಿಯವರು ಸಲಹೆ ಮಾಡಿದ್ದಾರೆ. ಹೊರಾಂಗಣ ಮತ್ತು ಒಳಾಂಗಣದಲ್ಲಿ ಜನಜಂಗುಳಿಯಿರುವೆಡೆಗಳಲ್ಲಿ ಮಾಸ್ಕ್ ಧರಿಸುವುದು ಅಗತ್ಯ ಎಂದು ಸೂಚಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ. ವಿಶೇಷವಾಗಿ ವೃದ್ದರು, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸಬೇಕು. ಎಲ್ಲರೂ ಕೋವಿಡ್ ಲಸಿಕೆಯನ್ನೂ ಶೀಘ್ರ ತೆಗೆದುಕೊಳ್ಳಬೇಕು ಎಂದಿದ್ದಾರೆ. ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್, ಶಾಪಿಂಗ್ ಮಾಲ್, ಕಚೇರಿಗಳು, ಬಸ್, ರೈಲು, ಮೆಟ್ರೋ, ವಿಮಾನಯಾನದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ.
ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣ ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಫಲಿತಾಂಶದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಪ್ರಮಾಣೀಕೃತ ಶಿಷ್ಟಾಚಾರದನ್ವಯ ಕ್ರಮಗಳನ್ನು ಪಾಲಿಸಬೇಕು. ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ಪ್ರಾಣಾಯಾಮ, ವ್ಯಾಯಾಮ, ಉಸಿರಾಟದ ವ್ಯಾಯಾಮ, ಧ್ಯಾನ ಮಾಡಬಹುದು.