ಕಾಪು : ಕಾಪು ಪುರಸಭಾ ವ್ಯಾಪ್ತಿಯ ಪೊಲಿಪು ವಾರ್ಡಿನ ಸಮುದ್ರ ತೀರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಕಡಲ್ಕೊರೆತದ ಭೀತಿಯಿಂದ ಆತಂಕದಿಂದ ದಿನಗಳೆಯುವ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯ ಖಂಡಿಸಿ ಸ್ಥಳೀಯರು ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಈ ಹಿಂದೆ ಸಮುದ್ರ ದಡದಲ್ಲಿ ಹಾಕಲಾಗಿದ್ದ ತಡೆಗೋಡೆಯನ್ನು ತೆರವುಗೊಳಿಸಿ, ಹೊಸತಾಗಿ ಸದೃಢವಾದ ತಡೆಗೋಡೆ ನಿರ್ಮಿಸಿಕೊಡುತ್ತೇವೆ ಎಂದು ವಾಗ್ದಾನ ಮಾಡಿದ್ರು. ಆದ್ರೆ ಯಾವುದೇ ರೀತಿಯ ಕಾಮಗಾರಿಯನ್ನು ಕೈಗೊಳ್ಳದ ಪರಿಣಾಮ ಈ ಪರಿಸರದ 8ರಿಂದ 10 ಮನೆಗಳು ಮತ್ತು ಹಲವಾರು ತೆಂಗಿನಮರಗಳು ನೀರು ಪಾಲಾಗುವ ಹಂತದಲ್ಲಿವೆ. ಇದರಿಂದಾಗಿ ಸ್ಥಳೀಯ ನಿವಾಸಿಗಳು ಆತಂಕದಿಂದ ಜೀವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆ ಗೆ ಎರಡು ದಿನದಲ್ಲಿ ಪರಿಹಾರ ನೀಡದಿದ್ದಲ್ಲಿ ಕರಾವಳಿಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿ ಇಲ್ಲಿನ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿಯವರಿಗೆ, ಕಾರ್ಯ ನಿರ್ವಾಹಕ ಅಭಿಯಂತರರಿಗೆ ಮತ್ತು ಗುತ್ತಿಗೆದಾರರಿಗೆ ಕರೆಮಾಡಿ ಪರಿಸ್ಥಿತಿಯನ್ನು ಮನವರಿಕೆ ಮಾಡಿದ್ದು, ಎಲ್ಲರೂ ಶೀಘ್ರದಲ್ಲೇ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರಾರಂಭಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಇದೀಗ 3 ತಿಂಗಳು ಕಳೆದರೂ ಯಾವುದೇ ರೀತಿಯ ಕ್ರಮ ಕೈಗೊಳ್ಳದಿರುವ ಕಾರಣ ಮತ್ತು ಮಳೆಗಾಲವು ಪ್ರಾರಂಭವಾಗಿದ್ದು ಮನೆ-ಮರಗಳು ಸಮುದ್ರ ಪಾಲಾಗುವ ಭೀತಿಯಿದೆ ಎಂದು ಆರೋಪಿಸಿದರು. ಪುರಸಭಾ ಸದಸ್ಯರಾದ ರಾಧಿಕಾ ಸುವರ್ಣ, ಫರ್ಜಾನಾ, ಶೋಭಾ ಬಂಗೇರ, ಸ್ಥಳೀಯರಾದ ರಾಜೇಶ್ ಮೆಂಡನ್, ಸುಧಾಕರ ಸಾಲ್ಯಾನ್, ಅಶ್ವಿನಿ ಬಂಗೇರ, ಲವ ಕರ್ಕೇರ, ದೇವರಾಜ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.