ಕುಂದಾಪುರ : ಕರಾವಳಿ ಜಿಲ್ಲೆಯ ರಾಜಕಾರಣದಲ್ಲಿ ಅಪರೂಪದ ರಾಜಕೀಯ ಚಾಣಾಕ್ಷ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಡಿ (ಎ.ಜಿ. ಕೊಡ್ಡಿ) ಅವರು ಅಸೌಖ್ಯದಿಂದ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ತಾಲೂಕಿನ ಕೃಷಿಕ ಕುಟುಂಬದಲ್ಲಿ 1929ರ ಅ.1ರಂದು ಜನಿಸಿದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಡಿ ಅವರು ಸ್ವಾತಂತ್ರ್ಯ ಹೋರಾಟದ ಛಾಯೆಯಲ್ಲಿ ಬೆಳೆದವರು. ತಂದೆ ಕೃಷ್ಣರಾಯ ಕೊಡ್ಡಿ ಸ್ವಾತಂತ್ರ್ಯ ಹೋರಾಟಗಾರರು. ಕಾನೂನು ಪದವಿ ಪಡೆದ ಕೊಡ್ಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನಿಟ್ಟೂರು ಶ್ರೀನಿವಾಸ ರಾವ್ ಅವರೊಂದಿಗೆ ಸ್ವಲ್ಪ ಸಮಯ ವಕೀಲರಾಗಿ ಕೆಲಸ ನಿರ್ವಹಿಸಿದರು. ಬಳಿಕ ಕೃಷಿಯಲ್ಲಿಯೇ ತಮ್ಮನ್ನು ಪರಿಪೂರ್ಣವಾಗಿ ತೊಡಗಿಸಿಕೊಂಡವರು. ಸಹಕಾರಿ, ಕೃಷಿ, ರಾಜಕಾರಣದಲ್ಲಿ ಗುರುತಿಸಿಕೊಂಡ ಕೊಡ್ಡಿ ಒಂದೊಂದೇ ಮೆಟ್ಟಿಲೇರಿದರು.
ತಾಲೂಕು ಬೋರ್ಡ್ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಎಂಟು ವರ್ಷ ತಾಲೂಕು ಬೋರ್ಡ್ ಸದಸ್ಯರಾಗಿದ್ದರು. ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ, ಆರ್ಥಿಕ ಸಮಿತಿ ಸದಸ್ಯ, 1972-83ರ ತನಕ ಬೈಂದೂರು ಶಾಸಕ, 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷ, ಬಳಿಕ ಅದರ ಕಾರ್ಯಪಡೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಛಾತಿ ಮೂಡಿಸಿರುವ ಕೊಡ್ಡಿ, ಶಂಕರನಾರಾಯಣ ಸಿಎ ಬ್ಯಾಂಕ್ ಅಧ್ಯಕ್ಷ, ಎಪಿಎಂಪಿ ಅಧ್ಯಕ್ಷ, ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಸ್ಕ್ಯಾಮ್ಸ್ ನಿರ್ದೇಶಕ, ಮಂಗಳೂರು ಎಪಿಎಂಸಿ ಅಧ್ಯಕ್ಷ ಅಲ್ಲದೆ ರಾಜ್ಯ ಮಾರ್ಕೆಟಿಂಗ್ ಬೋರ್ಡ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 1982-1990ರ ತನಕ ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿ ಸೇವೆ ನೀಡಿದ್ದಾರೆ.